ಬೆಂಗಳೂರು: ‘ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರಿ ಸವಲತ್ತುಗಳನ್ನು ಒದಗಿಸಲು ಹಾಗೂ ಅವರು ಎದುರಿಸುತ್ತಿರುವ ಇನ್ನಿತರ ವ್ಯಾಪಾರಿ ಸಂಬಂಧಿ ಸಮಸ್ಯೆಗಳಿಗೆ ಗುರುತಿನ ಚೀಟಿಯಿಂದ ಪರಿಹಾರ ದೊರೆಯಲಿದೆ’ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದರು.
ಹೇರೋಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದ್ದ ‘ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
‘ಬೀದಿ ಬದಿ ವ್ಯಾಪಾರಿಗಳ ಸಮಸ್ಯೆ ಅರಿತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಡಳಿತಾವಧಿಯಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ಒಗ್ಗೂಡಿಸಿ ಅವರ ಕಷ್ಟಕ್ಕೆ ಸ್ಪಂದಿಸಿದರು. ಇದರ ಫಲವಾಗಿ ಬಿಬಿಎಂಪಿ ಹಾಗೂ ಸರ್ಕಾರದ ವತಿಯಿಂದ ಅವರಿಗೆ ಗುರುತಿನ ಚೀಟಿ ಹಂಚಿಕೆ ಮಾಡಲಾಗುತ್ತಿದೆ. ಗುರುತಿನ ಚೀಟಿ ಹೊಂದಿರುವ ವ್ಯಾಪಾರಿಗಳಿಗೆ ₹10 ಸಾವಿರದವರೆಗೆ ಸಾಲ ಸೌಲಭ್ಯ ಕಲ್ಪಿಸಲಾಗುವುದು. ಮಹಿಳಾ ವ್ಯಾಪಾರಿಗಳಿಗೆ ₹10 ಸಾವಿರದವರೆಗೆ ಪ್ರೋತ್ಸಾಹ ಧನ ನೀಡಲಾಗುವುದು’ ಎಂದರು.
ವಾರ್ಡ್ ವ್ಯಾಪ್ತಿಯಲ್ಲಿ 314 ಬೀದಿ ಬದಿ ವ್ಯಾಪಾರಿಗಳನ್ನು ಗುರುತು ಮಾಡಲಾಗಿದ್ದು ಎಲ್ಲರಿಗೂ ಗುರುತಿನ ಚೀಟಿ ವಿತರಣೆ ಮಾಡಲಾಯಿತು. ಟೈಲರಿಂಗ್ ತರಬೇತಿ ಪಡೆದಿರುವ 50 ಮಂದಿ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಲಾಯಿತು.
ಸಭೆಯಲ್ಲಿ ಮೀಟೂ–ಘಾಟು: ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಲಾಗುತ್ತಿದ್ದ ವೇಳೆ ಚಟಾಕಿ ಹಾರಿಸಿದ ಶಾಸಕ ಎಸ್.ಟಿ.ಸೋಮಶೇಖರ್ ಅವರು ‘ಮಹಿಳೆಯರ ಕೈ ತಾಗದಂತೆ ಸವಲತ್ತುಗಳನ್ನು ಹಸ್ತಾಂತರಿಸಿ. ಇಲ್ಲವಾದರೆ ಮೀಟೂ–ಘಾಟು ನಿಮಗೂ ತಟ್ಟಬಹುದು’ ಎಂದು ಹೇಳಿ ಸಭೆಯನ್ನು ನಗೆಗಡಲಿನಲ್ಲಿ ತೇಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.