ADVERTISEMENT

ಸಚಿವ ಮುನಿಯಪ್ಪ ಹೇಳಿಕೆಗೆ ಕಾಂಗ್ರೆಸ್‌ ಎಂಎಲ್‌ಸಿ ಕಿಡಿ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2023, 17:06 IST
Last Updated 6 ಆಗಸ್ಟ್ 2023, 17:06 IST
ಸಚಿವ ಕೆ.ಎಚ್‌. ಮುನಿಯಪ್ಪ
ಸಚಿವ ಕೆ.ಎಚ್‌. ಮುನಿಯಪ್ಪ   

ಬೆಂಗಳೂರು: ‘ಕಾನೂನು ಸಲಹೆ ಪಡೆದು ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಪ್ರಯತ್ನಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ಅವರು ನೀಡಿರುವ ಹೇಳಿಕೆ ಸರಿಯಲ್ಲ. ಅವರ ಹೇಳಿಕೆಯನ್ನು ವಿರೋಧಿಸುತ್ತೇನೆ’ ಎಂದು ವಿಧಾನ ಪರಿಷತ್‌ ಸದಸ್ಯ ಪ್ರಕಾಶ್‌ ರಾಥೋಡ್‌ ಹೇಳಿದರು.

ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟವು ನಗರದಲ್ಲಿ ಭಾನುವಾರ ಆಯೋಜಿಸಿದ್ದ ಮೀಸಲಾತಿ ಸಂರಕ್ಷಣಾ ರಾಜ್ಯ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಯಾವುದೇ ಪಕ್ಷ ಅಧಿಕಾರದಲ್ಲಿ ಇರಲಿ. ಸಮುದಾಯವನ್ನು ಕಡೆಗಣಿಸಿದರೆ ಸುಮ್ಮನಿರುವುದಿಲ್ಲ. ಸಮುದಾಯದ ಬೇಡಿಕೆ ಈಡೇರಿಸುವಂತೆ ಶೀಘ್ರದಲ್ಲೇ ಮುಖ್ಯಮಂತ್ರಿ ಬಳಿಗೆ ನಿಯೋಗ ಕರೆದೊಯ್ಯಲಾಗುವುದು’ ಎಂದರು.

ADVERTISEMENT

ಅಲೆಮಾರಿ ಮಾಡಿದ ಸರ್ಕಾರ: ‘ರಾಜ್ಯ ಸರ್ಕಾರವು ‘ಶಕ್ತಿ’ ಯೋಜನೆ ಅಡಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ, ಮಹಿಳೆಯರನ್ನು ಅಲೆಮಾರಿಗಳನ್ನಾಗಿ ಮಾಡಿದೆ. ಹೀಗಾಗಿ, ಅವರು ಎಲ್ಲೆಡೆ ಸುತ್ತಾಟ ನಡೆಸುತ್ತಿದ್ದಾರೆ’ ಎಂದು ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ಹೇಳಿದರು.

‘ಗ್ಯಾರಂಟಿ ಯೋಜನೆಗೆ ನಮ್ಮ ವಿರೋಧ ಇಲ್ಲ. ಐದು ವರ್ಷವೂ ಈ ಯೋಜನೆ ಅನುಷ್ಠಾನಕ್ಕೆ ತಂದು ಮತ್ತೆ ಕಾಂಗ್ರೆಸ್ಸೇ ಅಧಿಕಾರಕ್ಕೆ ಬರಲಿ. ಆದರೆ, ಎಸ್‌ಸಿಎಸ್‌ಪಿ– ಟಿಎಸ್‌ಪಿ ಯೋಜನೆಗೆ ಮೀಸಲಿಟ್ಟಿದ್ದ ₹ 11 ಸಾವಿರ ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡುತ್ತಿರುವುದು ಸಲ್ಲದು. ಆ ಅನುದಾನವನ್ನು ಬೋವಿ, ಕೊರಮ, ಕೊರಚ, ಅಲೆಮಾರಿ ಸಮುದಾಯದ ಅಭಿವೃದ್ಧಿಗೆ ಬಳಸಬೇಕು’ ಎಂದು ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.