ADVERTISEMENT

ಮೊಬೈಲ್ ಕಿತ್ತೊಯ್ಯುವ ವೇಳೆ ಅಪಘಾತ: ದ್ವಿಚಕ್ರ ವಾಹನ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2023, 4:36 IST
Last Updated 12 ಫೆಬ್ರುವರಿ 2023, 4:36 IST
   

ಬೆಂಗಳೂರು: ಮೈಸೂರು ರಸ್ತೆಯ ಬಾಲಗಂಗಾಧರನಾಥ ಸ್ವಾಮೀಜಿ (ಬಿಜಿಎಸ್) ಮೇಲ್ಸೇತುವೆಯಲ್ಲಿ ಶುಕ್ರವಾರ ರಾತ್ರಿ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ಕಬೀರ್ ಪಾಷಾ (19) ಎಂಬುವರು ಮೃತಪಟ್ಟಿದ್ದಾರೆ.

‘ಮೇಲ್ಸೇತುವೆಯ ರಸ್ತೆ ವಿಭಜಕಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಕಬೀರ್ ಪಾಷಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಬೀರ್ ಜೊತೆಗಿದ್ದ ಸ್ನೇಹಿತನೊಬ್ಬ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಸಿಟಿ ಮಾರ್ಕೆಟ್ ಸಂಚಾರ ಪೊಲೀಸರು ಹೇಳಿದರು.

‘ಕಬೀರ್ ಪಾಷಾ ಹಾಗೂ ಸ್ನೇಹಿತ ಇಬ್ಬರೂ ಹೆಲ್ಮೆಟ್‌ ಧರಿಸಿರಲಿಲ್ಲ. ಅತಿ ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣವೆಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ’ ಎಂದು ತಿಳಿಸಿದರು.

ADVERTISEMENT

ಎಂಟು ಮೊಬೈಲ್ ಪತ್ತೆ: ‘ಅಪಘಾತವಾಗಿದ್ದ ದ್ವಿಚಕ್ರ ವಾಹನದಲ್ಲಿ ಎಂಟು ಮೊಬೈಲ್‌ಗಳು ಸಿಕ್ಕಿವೆ. ಕಬೀರ್ ಪಾಷಾ ಹಾಗೂ ಸ್ನೇಹಿತ, ಸಾರ್ವಜನಿಕರ ಮೊಬೈಲ್ ಕಿತ್ತುಕೊಂಡು ಪರಾರಿಯಾಗುತ್ತಿದ್ದ ವೇಳೆಯಲ್ಲಿ ಅಪಘಾತ ಸಂಭವಿಸಿರುವ ಮಾಹಿತಿ ಇದೆ’ ಎಂದು ಪೊಲೀಸರು ಹೇಳಿದರು.

‘ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಎದುರು ಶುಕ್ರವಾರ ಮಹಿಳೆಯೊಬ್ಬರ ಮೊಬೈಲ್ ಕಿತ್ತೊಯ್ಯಲಾಗಿದೆ. ಕಬೀರ್ ಪಾಷಾ ಹಾಗೂ ಸ್ನೇಹಿತ ಈ ಕೃತ್ಯ ಎಸಗಿರುವ ಅನುಮಾನವಿದೆ. ವಾಹನದಲ್ಲಿ ಸಿಕ್ಕಿರುವ ಮೊಬೈಲ್‌ಗಳ ಮಾಲೀಕರನ್ನು ಪತ್ತೆ ಮಾಡಲಾಗುತ್ತಿದೆ. ಗಾಯಾಳು ಹೇಳಿಕೆ ಪಡೆಯಬೇಕಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.