ADVERTISEMENT

ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಕರ ಗಮನ ಬೇರೆಡೆ ಸೆಳೆದು 60 ಮೊಬೈಲ್‌ ಕಳ್ಳತನ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2024, 16:12 IST
Last Updated 3 ಸೆಪ್ಟೆಂಬರ್ 2024, 16:12 IST
ರವಿ 
ರವಿ    

ಬೆಂಗಳೂರು: ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಕರ ಗಮನ ಬೇರೆಡೆಗೆ ಸೆಳೆದು ಮೊಬೈಲ್‌ ಫೋನ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶದ ರವಿ ಬಂಧಿತ. 

ಆರೋಪಿಯಿಂದ ₹10 ಲಕ್ಷ ಮೌಲ್ಯದ ವಿವಿಧ ಕಂಪನಿಯ 60 ಮೊಬೈಲ್‌ ಫೋನ್‌ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ADVERTISEMENT

‘ಆನೇಕಲ್‌ ತಾಲ್ಲೂಕಿನ ಮಾಯಸಂದ್ರದ ವ್ಯಕ್ತಿಯೊಬ್ಬರು ನೀಡಿದ ದೂರು ಆಧರಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು’ ಎಂದು ಪೊಲೀಸರು ತಿಳಿಸಿದರು.

‘ಆರೋಪಿಯ ಸ್ನೇಹಿತರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಅವರ ಸೂಚನೆಯಂತೆ ನಗರಕ್ಕೆ ಬಂದಿದ್ದ ರವಿ ಮೊಬೈಲ್‌ ಕಳ್ಳತನಕ್ಕೆ ಇಳಿದಿದ್ದ. ಪ್ರಯಾಣಿಕನ ಸೋಗಿನಲ್ಲಿ ಬಿಎಂಟಿಸಿ ಬಸ್ ಏರುತ್ತಿದ್ದ ಆರೋಪಿ, ಪ್ರಯಾಣಿಕರ ಗಮನವನ್ನು ಬೇರೆಡೆಗೆ ಸೆಳೆದು ಮೊಬೈಲ್‌ ಹಾಗೂ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ’ ಎಂದು ಪೊಲೀಸರು ಹೇಳಿದರು.

‘ಕೃತ್ಯ ಎಸಗಿದ ನಂತರ ಆರೋಪಿ ಬಸ್‌ನಲ್ಲಿ ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದ. ಅಲ್ಲಿ ಕಡಿಮೆ ಬೆಲೆಗೆ ಮೊಬೈಲ್ ಮಾರಾಟ ಮಾಡುತ್ತಿದ್ದ. ಐ–ಫೋನ್‌ ಬಿಡಿಭಾಗ ತೆಗೆದು ಮಾರಾಟ ಮಾಡುತ್ತಿದ್ದ. ಕಳ್ಳತನ ಮಾಡಿದ ಎಲ್ಲ ಮೊಬೈಲ್‌ಗಳನ್ನು ಮಾರಾಟ ಮಾಡಿದ ಮೇಲೆ ನಗರಕ್ಕೆ ವಾಪಸ್‌ ಬರುತ್ತಿದ್ದ’ ಎಂದು ಪೊಲೀಸರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.