ಬೆಂಗಳೂರು: ನಿರ್ಮಾಣ ಹಂತದ ಕಟ್ಟಡಗಳಲ್ಲಿ ವಾಸವಿರುತ್ತಿದ್ದ ಕಾರ್ಮಿಕರ ಕೊಠಡಿ ಹಾಗೂ ಬೀಗ ಹಾಕದ ಮನೆಗಳಿಗೆ ನುಗ್ಗಿ ಕಳವು ಮಾಡುತ್ತಿದ್ದ ಆರೋಪದಡಿ ಮುನಿಯಪ್ಪ ಎಂಬುವರನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಸ್ಥಳೀಯ ನಿವಾಸಿಯಾದ ಆರೋಪಿ, ಹಲವು ತಿಂಗಳಿನಿಂದ ಕೃತ್ಯ ಎಸಗುತ್ತಿದ್ದರು. ಅವರಿಂದ 16 ಮೊಬೈಲ್, ಲ್ಯಾಪ್ಟಾಪ್, ಎರಡು ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ಇವುಗಳ ಮೌಲ್ಯದ ₹ 3 ಲಕ್ಷ’ ಎಂದು ಪೊಲೀಸರು ಹೇಳಿದರು.
‘ಠಾಣೆ ವ್ಯಾಪ್ತಿಯಲ್ಲಿರುವ ನಿವಾಸಿಯೊಬ್ಬರು, ಡಿ. 26ರಂದು ರಾತ್ರಿ ಲ್ಯಾಪ್ಟಾಪ್ ಹಾಗೂ ಮೊಬೈಲ್ ಅನ್ನು ಟೇಬಲ್ ಮೇಲಿಟ್ಟು ಮಲಗಿದ್ದರು. ತಡರಾತ್ರಿ ಮನೆಗೆ ನುಗ್ಗಿದ್ದ ಆರೋಪಿ, ಲ್ಯಾಪ್ಟಾಪ್ ಹಾಗೂ ಮೊಬೈಲ್ ಕದ್ದೊಯ್ದಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡಾಗ ಆರೋಪಿ ಸಿಕ್ಕಿಬಿದ್ದಿದ್ದಾರೆ’ ಎಂದೂ ತಿಳಿಸಿದರು.
‘ನಿರ್ಮಾಣ ಹಂತದ ಕಟ್ಟಡಗಳಲ್ಲಿ ಕೊಠಡಿಗಳಿಗೆ ಬಾಗಿಲು ಹಾಗೂ ಕಿಟಕಿ ಇರುತ್ತಿರಲಿಲ್ಲ. ಆದರೆ, ಕಾರ್ಮಿಕರು ಅದೇ ಕೊಠಡಿಯಲ್ಲೇ ವಾಸವಿರುತ್ತಿದ್ದರು. ಅಂತಹ ಕಟ್ಟಡಗಳ ಕೊಠಡಿಗಳನ್ನು ಗುರುತಿಸುತ್ತಿದ್ದ ಆರೋಪಿ, ತಡರಾತ್ರಿ ಕೃತ್ಯ ಎಸಗಿ ಪರಾರಿಯಾಗುತ್ತಿದ್ದರು. ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನೂ ಆರೋಪಿ ಕಳವು ಮಾಡುತ್ತಿದ್ದರು’ ಎಂದೂ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.