ಬೆಂಗಳೂರು: ‘ಶ್ರೀಮಂತ ಕುಟುಂಬದ ಮಕ್ಕಳಿಗೆ ಲಭಿಸುವ ಉನ್ನತ ಶಿಕ್ಷಣವು ಸರ್ಕಾರಿ ಶಾಲೆಯ ಮಕ್ಕಳಿಗೂ ದೊರೆಯಬೇಕೆಂಬ ಉದ್ದೇಶದಿಂದ ಬಿ.ಟಿ.ಎಂ ವಿಧಾನಸಭಾ ಕ್ಷೇತ್ರದ 24 ಸರ್ಕಾರಿ ಶಾಲೆಗಳ ನವೀಕರಣದ ಜೊತೆಯಲ್ಲಿ ಆಧುನೀಕರಣ ಸೌಲಭ್ಯ ಒದಗಿಸಲಾಗಿದೆ’ ಎಂದು ಶಾಸಕ ರಾಮಲಿಂಗಾರೆಡ್ಡಿ ಹೇಳಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ ಮತ್ತು ಬಿಟಿಎಂ ಕ್ಷೇತ್ರದ 24 ಸರ್ಕಾರಿ ಶಾಲೆಗಳು ಅಭಿವೃದ್ಧಿಯನ್ನು ಸರ್ಕಾರದ ಶಿಕ್ಷಣ ಇಲಾಖೆಯ ಮುಖ್ಯ ಸಲಹೆಗಾರ ಪ್ರೊ.ದೊರೆಸ್ವಾಮಿ ಅವರ ಜತೆಗೆ ವೀಕ್ಷಿಸಿದ ಬಳಿಕ ಅವರು ಮಾತನಾಡಿದರು.
‘ಸಮಾಜದಲ್ಲಿ ವಿದ್ಯಾವಂತರಿಗೆ ಮಾತ್ರ ಗೌರವ ಸಿಗುತ್ತದೆ. ಯಾವ ಮಗುವೂ ಶಿಕ್ಷಣದಿಂದ ವಂಚಿತರಾಗಬಾರದು’ ಎಂದು ಹೇಳಿದರು.
‘ಮಕ್ಕಳು ಕುಳಿತುಕೊಳ್ಳಲು ಡೆಸ್ಕ್, ಬರೆಯಲು ಟೇಬಲ್ ಮತ್ತು ಕಂಪ್ಯೂಟರ್ ಲ್ಯಾಬ್, ಸೈನ್ಸ್ ಲ್ಯಾಬ್ ಮತ್ತು ಶೌಚಾಲಯ ವ್ಯವಸ್ಥೆ, ಆಟದ ಮೈದಾನ ನವೀಕರಣ ಮಾಡಲಾಗಿದೆ. ಮಕ್ಕಳ ಶಿಕ್ಷಣ ಪಡೆದು ಉನ್ನತ ಸ್ಥಾನಮಾನ ಗಳಿಸಿ, ರಾಜ್ಯ, ರಾಷ್ಟ್ರಕ್ಕೆ ಉತ್ತಮ ಪ್ರಜೆಯಾಗಲಿ ಎಂಬುದು ನಮ್ಮ ಆಶಯ’ ಎಂದು ಅವರು ಹೇಳಿದರು.
ಪ್ರೊ.ದೊರೆಸ್ವಾಮಿ ಮಾತನಾಡಿ, ‘ಶಿಕ್ಷಣದಲ್ಲಿ ಅಭಿವೃದ್ದಿಯಾಗಬೇಕಾದರೆ ಸರ್ಕಾರದ ಜೊತೆಯಲ್ಲಿ ಖಾಸಗಿ ಸಂಸ್ಥೆಗಳು ಸಹಕಾರ ನೀಡಬೇಕು. ಆಗ ಬದಲಾವಣೆ ತರಲು ಸಾಧ್ಯ’ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಂಜುನಾಥ ರೆಡ್ಡಿ, ಬೈರಸಂದ್ರ ನಾಗರಾಜ್, ಚಂದ್ರಪ್ಪ, ಗೋವರ್ಧನ್ ರೆಡ್ಡಿ, ಆನಂದ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.