ADVERTISEMENT

ವಿಮೆ ಕಂಪನಿಗಳ ಲಾಬಿಗೆ ಮಣಿದು ತಿದ್ದುಪಡಿ: ಆರೋಪ

ತಿದ್ದುಪಡಿ ಹಿಂಪಡೆಯಲು ಆಗ್ರಹ; ವಕೀಲರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2019, 20:35 IST
Last Updated 19 ಸೆಪ್ಟೆಂಬರ್ 2019, 20:35 IST
ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ವಕೀಲರು ಪ್ರತಿಭಟನೆ ನಡೆಸಿದರು
ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ವಕೀಲರು ಪ್ರತಿಭಟನೆ ನಡೆಸಿದರು   

ಬೆಂಗಳೂರು: ‘ವಿಮೆ ಕಂಪನಿಗಳ ಲಾಬಿಗೆ ಮಣಿದು ಮೋಟಾರು ವಾಹನಗಳ ಕಾಯ್ದೆಗೆ ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರ, ಜನವಿರೋಧಿ ನೀತಿ ಅನುಸರಿಸುತ್ತಿದೆ’ ಎಂದು ಆರೋಪಿಸಿ ವಕೀಲರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ರಾಜ್ಯ ವಕೀಲರ ಪರಿಷತ್ ಹಾಗೂ ಬೆಂಗಳೂರು ವಕೀಲರ ಸಂಘದ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸೇರಿದ್ದ ವಕೀಲರು, ‘ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ಕೂಡಲೇ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.

‘ವಿಮೆ ಕಂಪನಿಗಳು ತಮ್ಮ ಲಾಭ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಕಾಯ್ದೆಗೆ ತಿದ್ದುಪಡಿ ತರಲು ಲಾಬಿ ಮಾಡಿವೆ. ಜನರ ಹಿತ ಬಯಸಬೇಕಾದ ಸರ್ಕಾರ, ಕಂಪನಿಗಳ ತಾಳಕ್ಕೆ ತಕ್ಕಂತೆ ಕುಣಿದು ಕಾಯ್ದೆಗೆ ತಿದ್ದುಪಡಿ ತಂದಿದೆ. ಇದು ಅವೈಜ್ಞಾನಿಕ ತಿದ್ದುಪಡಿ ಆಗಿದೆ. ಇದರಿಂದ ವಕೀಲರು ಸೇರಿದಂತೆ ಜನರೆಲ್ಲರೂ ಕಷ್ಟ ಅನುಭವಿಸುವಂತಾಗಿದೆ’ ಎಂದು ಪ್ರತಿಭಟನಕಾರರು ದೂರಿದರು.

ADVERTISEMENT

‘ಸಂಚಾರ ನಿಯಮ ಉಲ್ಲಂಘಿಸುವವರಿಗೆ ವಿಧಿಸುವ ದಂಡದ ಮೊತ್ತವನ್ನು ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಹೆಚ್ಚಳ ಮಾಡಲಾಗಿದೆ. ಇದರಲ್ಲಿ ಹಲವರ ಲಾಭವೂ ಅಡಗಿದೆ. ಇದರ ಪರಿಣಾಮ, ದುಬಾರಿ ದಂಡ ಪಾವತಿಸಲಾಗದೇ ಜನರು ತೊಂದರೆಗೆ ಸಿಲುಕುತ್ತಿದ್ದಾರೆ. ಸರ್ಕಾರದ ನಡೆಯನ್ನು ಪ್ರಶ್ನಿಸಿ ಸಾಂಕೇತಿಕ ಪ್ರತಿಭಟನೆ ನಡೆಸುತ್ತಿದ್ದೇವೆ. ಇದಕ್ಕೆ ಸ್ಪಂದಿಸದಿದ್ದರೆ, ಮುಂದಿನ ದಿನಗಳಲ್ಲಿ ಗಂಭೀರ ಸ್ವರೂಪದ ಹೋರಾಟ ನಡೆಸಲಾಗುವುದು’ ಎಂದು ವಕೀಲರು ಎಚ್ಚರಿಸಿದರು.

ಪ್ರಧಾನ ಮಂತ್ರಿ ಮೋದಿಗೆ ಪತ್ರ

‘ತಿದ್ದುಪಡಿಯನ್ನು ಕಾನೂನು ತಜ್ಞರೂ ವಿರೋಧಿಸುತ್ತಿದ್ದಾರೆ. ಹೀಗಾಗಿ, ತಿದ್ದುಪಡಿ ಹಿಂಪಡೆಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ’ ಎಂದು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ‘ಪ್ರಜಾವಾಣಿ’ಗೆ ತಿಳಿಸಿದರು.

‘ಪ್ರಧಾನ ಮಂತ್ರಿಯವರ ಪ್ರತಿಕ್ರಿಯೆಗಾಗಿ ಕಾಯುತ್ತೇವೆ. ನಂತರವೇ ಹೋರಾಟದ ಬಗ್ಗೆ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.