ADVERTISEMENT

‘ಮುದ್ರಾ’ ಸಾಲಕ್ಕಾಗಿ ₹ 6.03 ಲಕ್ಷ ಕಳೆದುಕೊಂಡ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2021, 22:37 IST
Last Updated 10 ಏಪ್ರಿಲ್ 2021, 22:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಸಾಲ ಕೊಡಿಸುವುದಾಗಿ ಹೇಳಿ ನಗರದ ನಿವಾಸಿಯೊಬ್ಬರಿಂದ ₹ 6.03 ಲಕ್ಷ ಪಡೆದು ವಂಚಿಸಲಾಗಿದ್ದು, ಈ ಕುರಿತು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ದೇವನಹಳ್ಳಿ ನಿವಾಸಿಯಾಗಿರುವ 36 ವರ್ಷದ ವ್ಯಕ್ತಿ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಮುದ್ರಾ ಯೋಜನೆಯಡಿ ಸಾಲ ಪಡೆಯುವುದಕ್ಕಾಗಿ ದೂರುದಾರ, ಇಂಟರ್ನೆಟ್‌ನಲ್ಲಿ ಹುಡುಕಾಡಿದ್ದರು. ಅದನ್ನು ತಿಳಿದುಕೊಂಡಿದ್ದ ಅಪರಿಚಿತ, ದೂರುದಾರರಿಗೆ ಕರೆ ಮಾಡಿದ್ದರು. ‘ಮುದ್ರಾ ಯೋಜನೆಯಡಿ ಸಾಲ ಕೊಡಿಸುತ್ತೇನೆ’ ಎಂದಿದ್ದರು. ಈ ಸಂಗತಿ ದೂರಿನಲ್ಲಿದೆ’ ಎಂದೂ ತಿಳಿಸಿವೆ.

ADVERTISEMENT

‘ವಾಟ್ಸ್‌ಆ್ಯಪ್‌ ಮೂಲಕ ದೂರುದಾರರಿಂದ ದಾಖಲೆ ಪಡೆದುಕೊಂಡಿದ್ದ ಆರೋಪಿ, ಸಾಲ ಮಂಜೂರು ಮಾಡಲು ಕೆಲ ಶುಲ್ಕಗಳನ್ನು ಪಾವತಿಸಬೇಕೆಂದು ಹೇಳಿದ್ದ. ಅದನ್ನು ನಂಬಿದ್ದ ದೂರುದಾರ, ಗೂಗಲ್ ಪೇ ಮೂಲಕ ಹಂತ ಹಂತವಾಗಿ ₹ 6.03 ಲಕ್ಷ ಜಮೆ ಮಾಡಿದ್ದರು. ಹಣ ಪಡೆದ ನಂತರ ಆರೋಪಿ ನಾಪತ್ತೆಯಾಗಿದ್ದು, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ’ ಎಂದೂ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.