ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸಲು ನಿಗದಿಪಡಿಸಿರುವ ಸ್ಥಳವನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಸೋಮವಾರ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು, ‘ಕ್ಷೇತ್ರದ ವ್ಯಾಪ್ತಿಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸಬೇಕೆಂಬ ಸಾರ್ವಜನಿಕರ ಬಹು ದಿನಗಳ ಬೇಡಿಕೆ ಈಗ ಈಡೇರಲಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚಿಸಲಾಗಿತ್ತು. ಆಸ್ಪತ್ರೆ ನಿರ್ಮಿಸಲು ₹ 200 ಕೋಟಿ ಅನುದಾನ ಮಂಜೂರು ಮಾಡಿದ್ದಾರೆ’ ಎಂದು ಹೇಳಿದರು.
‘ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಶೀಘ್ರದಲ್ಲಿಯೇ ಭೂಮಿ ಪೂಜೆ ನೆರವೇರಿಸಲಾಗುವುದು. ಯಾವುದೇ ಲೋಪಗಳು ಆಗದಂತೆ ಆಸ್ಪತ್ರೆ ಕಾಮಗಾರಿ ಕೈಗೊಳ್ಳಲಾಗುತ್ತದೆ. ಈ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸಾ ಯಂತ್ರೋಪಕರಣಗಳು, ಡಯಾಲಿಸಿಸ್, ಹೃದ್ರೋಗ, ಮಹಿಳಾ ಮತ್ತು ಮಕ್ಕಳ ಚಿಕಿತ್ಸೆಗೆ ಪ್ರತ್ಯೇಕ ವ್ಯವಸ್ಥೆ, ತಜ್ಞ ವೈದ್ಯರು ಮತ್ತು ಶುಶ್ರೂಕರ ತಂಡ ಸೇರಿದಂತೆ ಹತ್ತು ಹಲವಾರು ಚಿಕಿತ್ಸಾ ಸೌಲಭ್ಯಗಳು ಇರಲಿವೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.