ADVERTISEMENT

ಕನ್ನಡ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ನೀಡಲು ಎನ್‌. ರವಿಕುಮಾರ್‌ ಆಗ್ರಹ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2021, 21:25 IST
Last Updated 4 ಮಾರ್ಚ್ 2021, 21:25 IST
ಎನ್. ರವಿಕುಮಾರ್
ಎನ್. ರವಿಕುಮಾರ್   

ಬೆಂಗಳೂರು: ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರವನ್ನು ಭಾರತೀಯ ಭಾಷಾ ಸಂಸ್ಥಾನದಿಂದ (ಸಿಐಐಎಲ್‌) ಪ್ರತ್ಯೇಕಿಸಿ, ಸ್ವಾಯತ್ತ ಸ್ಥಾನಮಾನ ನೀಡುವಂತೆ ರಾಜ್ಯ ಸರ್ಕಾರ ತಕ್ಷಣವೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿಧಾನ ಪರಿಷತ್‌ನಲ್ಲಿ ಒತ್ತಾಯಿಸಿದರು.

ಗುರುವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ಸಿಐಐಎಲ್‌ ಅನ್ನೇ ಭಾರತೀಯ ಭಾಷಾ ವಿಶ್ವವಿದ್ಯಾಲಯವನ್ನಾಗಿ ಪರಿವರ್ತಿಸುವ ಪ್ರಕ್ರಿಯೆ ಆರಂಭವಾಗಿದೆ. ಇದರಿಂದ ಸಿಐಎಎಲ್‌ನ ಸ್ಥಾನಮಾನ ಮತ್ತಷ್ಟು ಕುಗ್ಗಲಿದೆ. ಅಂತಹ ಬೆಳವಣಿಗೆಗೆ ಅವಕಾಶ ನೀಡಬಾರದು’ ಎಂದರು.

ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ಥಾನಮಾನ ದೊರೆತು 12 ವರ್ಷ ಕಳೆದಿದೆ. ಆದರೆ, ಕನ್ನಡ ಅಧ್ಯಯನ ಕೇಂದ್ರಕ್ಕೆ ಈವರೆಗೂ ಸ್ವಾಯತ್ತ ಸಂಸ್ಥೆಯ ಸ್ಥಾನಮಾನ ದೊರಕಿಲ್ಲ. ತಮಿಳು ಭಾಷಾ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತ ಸ್ಥಾನಮಾನ ಇರುವುದರಿಂದ ₹ 25.04 ಕೋಟಿ ಅನುದಾನ ದೊರಕಿದೆ. ಕನ್ನಡ ಅಧ್ಯಯನ ಸಂಸ್ಥೆಗೆ ಸ್ವಾಯತ್ತತೆ ಇಲ್ಲದ ಕಾರಣದಿಂದ ಕೇವಲ ₹ 3.06 ಕೋಟಿ ಅನುದಾನ ನೀಡಲಾಗಿದೆ ಎಂದು ಹೇಳಿದರು.

ADVERTISEMENT

ಕನ್ನಡ 2,500 ವರ್ಷಗಳ ಇತಿಹಾಸವಿರುವ ಭಾಷೆ. ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ ಸ್ಥಾಪನೆಗೆ ಮೈಸೂರು ವಿಶ್ವವಿದ್ಯಾಲಯ ಒಂದು ಕಟ್ಟಡ ಮತ್ತು 4 ಎಕರೆ ಜಮೀನನ್ನು ನೀಡಿದೆ. ಸಿಐಐಎಲ್‌ ಕಚೇರಿ ಕೂಡ ಮೈಸೂರಿನಲ್ಲೇ ಇದೆ. ಕನ್ನಡ ಅಧ್ಯಯನ ಕೇಂದ್ರವನ್ನೂ ಸ್ವಾಯತ್ತಗೊಳಿಸಿ, ಭಾಷೆಯ ಅಧ್ಯಯನ ಮತ್ತು ಬೆಳವಣಿಗೆಗೆ ಹೆಚ್ಚಿನ ಅನುದಾನ ಪಡೆಯಲು ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.