ಬೆಂಗಳೂರು: ಮೆಟ್ರೊ ಯೋಜನೆಯ ಹಂತ 2ಎ ಮತ್ತು ಹಂತ 2ಬಿ ಅಡಿ ಒಟ್ಟು 58 ಕಿ.ಮೀ ಮಾರ್ಗದ ಕಾಮಗಾರಿಯನ್ನು 5 ವರ್ಷದೊಳಗೆ ಪೂರ್ಣಗೊಳಿಸಿ, ಮೆಟ್ರೊ ರೈಲು ಸಂಚಾರ ಆರಂಭಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಇದಕ್ಕಾಗಿ ತ್ವರಿತಗತಿಯಲ್ಲಿ ಸಿದ್ಧತೆ ನಡೆಸಿಕೊಳ್ಳುವಂತೆ ಸಲಹೆ ನೀಡಿದರು.
ಪ್ರಮುಖ ಭೂಸ್ವಾಧೀನ ಪ್ರಕ್ರಿಯೆಯನ್ನು ಮತ್ತು ಯುಟಿಲಿಟಿ ಸ್ಥಳಾಂತರ ಕಾಮಗಾರಿಯನ್ನು ಪೂರ್ಣಗೊಳಿಸಿದ್ದು, ಕಾಮಗಾರಿಗಳನ್ನು ಆರಂಭಿಸಲು ಸಿದ್ಧತೆ ನಡೆಸಲಾಗಿದೆ ಎಂದು ನಿಗಮದ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.
ಸರ್ಕಾರವು 2019 ರ ಜನವರಿಯಲ್ಲಿ ಈ ಯೋಜನೆಗೆ ಅನುಮೋದನೆ ನೀಡಿದ್ದು, ಕೇಂದ್ರ ಸರ್ಕಾರ ಏಪ್ರಿಲ್ನಲ್ಲಿ ಅನುಮೋದನೆ ನೀಡಿದೆ. ಇದು ಹೊರ ವರ್ತುಲ ರಸ್ತೆ, ಸೆಂಟ್ರಲ್ ಸಿಲ್ಕ್ ಬೋರ್ಡ್ನಿಂದ ಹೆಬ್ಬಾಳದ ಉದ್ದಕ್ಕೂ ಇರುವ ಐಟಿ ಕೈಗಾರಿಕೆ ಮತ್ತು ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಸಾರ್ವಜನಿಕ ಸಾರಿಗೆಯನ್ನು ಒದಗಿಸುತ್ತದೆ.
ಹಂತ–2 ಎ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ಕೆ.ಆರ್.ಪುರದವರೆಗೆ 20 ಕಿ.ಮೀ ಮತ್ತು ಹಂತ–2 ಬಿ ಯೋಜನೆಯಲ್ಲಿ ಕೆ.ಆರ್.ಪುರದಿಂದ ಹೆಬ್ಬಾಳದ ಮೂಲಕ ವಿಮಾನನಿಲ್ದಾಣ ಟರ್ಮಿನಲ್ವರೆಗೆ 38 ಕಿ.ಮೀ, ಹೀಗೆ ಒಟ್ಟು 58 ಕಿ.ಮೀ ಉದ್ದದ ಮಾರ್ಗ ಇದಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.