ಬೆಂಗಳೂರು: ‘ಕನಕಪುರ ರಸ್ತೆಯಲ್ಲಿರುವ ನಾರಾಯಣಗುರು ಗುರುಕುಲದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅಗತ್ಯ ಆರ್ಥಿಕ ನೆರವು ನೀಡಲು ಸಿದ್ಧವಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶುಕ್ರವಾರ ಆಯೋಜಿಸಿದ್ದ ‘ಬ್ರಹ್ಮಶ್ರೀ ನಾರಾಯಣಗುರು ಜಯಂತಿ’ಯನ್ನು ಉದ್ಘಾಟಿಸಿ ಮಾತನಾಡಿದರು.
‘ನಾರಾಯಣಗುರುಗಳುಸರಳ ವಿಚಾರಧಾರೆಗಳಿಂದಲೇ ಜನಸಾಮಾನ್ಯರಿಗೆ ಹತ್ತಿರವಾದವರು. ಸಮಾನತೆಗಾಗಿ ಶ್ರಮಿಸಿದರು. ಅಷ್ಟೇ ಅಲ್ಲ, ಜಗತ್ತಿನಲ್ಲಿ ಒಂದೇ ಜಾತಿ, ಒಂದೇ ಧರ್ಮ ಹಾಗೂ ಒಂದೇ ದೇವರು ಎಂಬ ತತ್ವ ಪ್ರತಿಪಾದಿಸಿದರು. ಇಂತಹ ಮಹಾನ್ ಸಂತನ ಹೆಸರಿನ ಗುರುಕುಲದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ’ ಎಂದು ಹೇಳಿದರು.
ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ‘ನಾರಾಯಣಗುರುಗಳ ಜೀವನಾದರ್ಶ ಎಲ್ಲರಿಗೂ ಮಾದರಿಯಾಗಿದೆ’ ಎಂದರು. ‘ನಾರಾಯಣಗುರುಗಳ ನಿಗಮ ಮಂಡಳಿ ರಚನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಪರಿಶೀಲಿಸಿ, ಮುಂದಿನ ಕ್ರಮ ಕೈಗೊಳ್ಳಲಿದೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.