ಕಾರ್ಯಕ್ರಮದಲ್ಲಿ ಮಾಧವಿ ಪಾರೆಖ್ ಅವರಿಗೆ ‘ಪ್ರೊ.ಎಂ.ಎಸ್. ನಂಜುಂಡರಾವ್ ರಾಷ್ಟ್ರೀಯ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಬಿ.ಎಲ್. ಶಂಕರ್, ಪ.ಸ. ಕುಮಾರ್ ಮತ್ತು ಎಂ.ಬಿ.ಪಾಟೀಲ ಉಪಸ್ಥಿತರಿದ್ದರು
ಪ್ರಜಾವಾಣಿ ಚಿತ್ರ
ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ತು ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕಲಾವಿದೆ ಮಾಧವಿ ಪಾರೆಖ್ ಅವರಿಗೆ ‘ಪ್ರೊಎಂ.ಎಸ್. ನಂಜುಂಡ ರಾವ್ ರಾಷ್ಟ್ರೀಯ ಪ್ರಶಸ್ತಿ’ ಪ್ರದಾನ ಮಾಡಲಾಯಿತು.
ಈ ಪ್ರಶಸ್ತಿ ಪ್ರದಾನ ಮಾಡಿದ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ, ‘ಚಿತ್ರಕಲಾ ಪರಿಷತ್ತು ದೇಶ–ವಿದೇಶದಲ್ಲಿ ತನ್ನದೆಯಾದ ಛಾಪು ಹೊಂದಿದೆ. ಇಂತಹ ಸಂಸ್ಥೆ ಕಟ್ಟಲು ಶ್ರಮಿಸಿದವರಲ್ಲಿ ಎಂ.ಎಸ್. ನಂಜುಂಡರಾವ್ ಪ್ರಮುಖರು. ಅವರ ಜನ್ಮದಿನದ ಪ್ರಯುಕ್ತ ಪ್ರತಿ ವರ್ಷ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಒಳ್ಳೆಯ ಪರಿಪಾಟ’ ಎಂದು ಶ್ಲಾಘಿಸಿದರು.
ಪರಿಷತ್ತಿನ ಅಧ್ಯಕ್ಷ ಬಿ.ಎಲ್. ಶಂಕರ್, ‘ಡಿಜಿಟಲ್ ತಂತ್ರಜ್ಞಾನದ ಯುಗದಲ್ಲಿ ಸಾಂಪ್ರದಾಯಿಕ ಕಲೆ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದೆ. ಸಾಂಪ್ರದಾಯಿಕ ಕಲಾ ಶಿಕ್ಷಣ ಉಳಿಸಿ, ಬೆಳೆಸಲು ಪರಿಷತ್ತು ಶ್ರಮಿಸುತ್ತಿದೆ. ಕಲೆಯನ್ನು ಸಾಧ್ಯವಾದಷ್ಟು ಜನರಿಗೆ ತಲುಪಿಸಬೇಕೆಂಬ ಉದ್ದೇಶದಿಂದಲೇ ಚಿತ್ರಸಂತೆಯನ್ನು ಆಯೋಜಿಸಲಾಗುತ್ತಿದೆ. ಈ ಚಿತ್ರಸಂತೆಯು ಕಲಾವಿದರಿಗೂ ಉತ್ತಮ ವೇದಿಕೆ ಕಲ್ಪಿಸುತ್ತಿದೆ’ ಎಂದು ಹೇಳಿದರು.
ಈ ಪ್ರಶಸ್ತಿಯು ₹ 1 ಲಕ್ಷ ನಗದು, ಫಲಕ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪ.ಸ. ಕುಮಾರ್, ಕಲಾವಿದ ಮನು ಪಾರೆಖ್, ಶಶಿಧರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.