ಬೆಂಗಳೂರು: ರಾಜ್ಯ ತಾಂಡಾ ಅಭಿವೃದ್ಧಿ ನಿಗಮದ ಮಾದರಿಯಲ್ಲಿ ‘ರಾಷ್ಟ್ರೀಯ ತಾಂಡಾ ಅಭಿವೃದ್ಧಿ ನಿಗಮ’ ಸ್ಥಾಪಿಸುವ ಅಗತ್ಯವಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಇಲ್ಲಿ ಗುರುವಾರ ಹೇಳಿದರು.
ರಾಜ್ಯ ಬಂಜಾರ ನೌಕರರ ಸಾಂಸ್ಕೃತಿಕ ಕ್ಷೇಮಾಭಿವೃದ್ಧಿ ಸಂಘ ಹಾಗೂ ಬಂಜಾರ ಸಮುದಾಯದ ಸಂಘಟನೆಗಳ ಆಶ್ರಯದಲ್ಲಿ ನಡೆದ ಪ್ರಗತಿ ಚಿಂತನಾ ಸಮಾವೇಶದಲ್ಲಿ ಅವರು ಮಾತನಾಡಿದರು. ‘ಮುಂದಿನ ದಿನಗಳಲ್ಲಿ ರಾಜ್ಯದ ಬೆಳವಣಿಗೆ ನೋಡಿಕೊಂಡು ರಾಷ್ಟ್ರ ಮಟ್ಟದಲ್ಲಿ ನಿಗಮ ಸ್ಥಾಪನೆಗೆ ಒತ್ತಡ ತರಲಾಗುವುದು. ಅದಕ್ಕಾಗಿ ಈಗಿನಿಂದಲೇ ಪ್ರಯತ್ನ ಆರಂಭಿಸಲಾಗುವುದು’ ಎಂದರು.
ಲಂಬಾಣಿ ಸಮುದಾಯದ ಸಂಸ್ಕೃತಿ ಮತ್ತು ಭಾಷೆಯನ್ನು ಕಾಪಾಡುವ ಅಗತ್ಯತೆ ಎದುರಾಗಿದೆ. ಸರ್ಕಾರದ ಮಟ್ಟದಲ್ಲಿ ಸಮುದಾಯದ ಅಭಿವೃದ್ಧಿಗೆ ಶಾಸಕರು, ಸಚಿವರು ಪಕ್ಷಾತೀತವಾಗಿ ಹೋರಾಟ ನಡೆಸಬೇಕು ಎಂದು ಸಲಹೆ ಮಾಡಿದರು.
ಸಂಸದ ಉಮೇಶ್ ಜಾಧವ್, ‘ಮುಂದಿನ ವರ್ಷದ ಫೆಬ್ರುವರಿ 15ಕ್ಕೆ ದೆಹಲಿಯಲ್ಲಿ ಲಂಬಾಣಿ ಸಮುದಾಯದ ಶಕ್ತಿ ಪ್ರದರ್ಶನ ನಡೆಸಬೇಕು. ಲಂಬಾಣಿ ಸಮುದಾಯದ 8 ಶಾಸಕರು, ಒಬ್ಬರು ವಿಧಾನ ಪರಿಷತ್ ಸದಸ್ಯರು ಇದ್ದು, ಸಮುದಾಯದ ವಿಚಾರ ಬಂದಾಗ ಪಕ್ಷಾತೀತವಾಗಿ ಹೋರಾಟ ನಡೆಸಬೇಕು’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.