ಬೆಂಗಳೂರು: ಬ್ಯಾಡರಹಳ್ಳಿ ಮುಖ್ಯರಸ್ತೆಯಲ್ಲಿ ಗುಂಡಿಯಿಂದಾಗಿ ಅಪಘಾತ ಸಂಭವಿಸಿ ಶಿಕ್ಷಕಿ ಶರ್ಮಿಳಾ (38) ಮೃತಪಟ್ಟಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಆಮ್ ಆದ್ಮಿ ಪಾರ್ಟಿಯ 50 ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
‘ಮಾಗಡಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಲ್ಲಿ ಗುಂಡಿಗಳು ಹೆಚ್ಚಾಗಿವೆ. ಗುಂಡಿ ತಪ್ಪಿಸಲು ಹೋಗಿ ಭಾನುವಾರ ಅಪಘಾತವಾಗಿ, ಶರ್ಮಿಳಾ ಮೃತಪಟ್ಟಿದ್ದಾರೆ. ಇವರ ಸಾವಿಗೆ ಬಿಬಿಎಂಪಿ, ಜಲಮಂಡಳಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿ ಆಪ್ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದರು.
ಇದನ್ನೂ ಓದಿ:ರಸ್ತೆ ಗುಂಡಿಯಿಂದ ಅಪಘಾತ: ಶಿಕ್ಷಕಿ ಸಾವು
ರಸ್ತೆಯಲ್ಲಿ ವಾಹನಗಳ ಸಂಚಾರ ತಡೆದು ಘೋಷಣೆ ಕೂಗುತ್ತಿದ್ದರು. ಸ್ಥಳದಲ್ಲಿದ್ದ ಪೊಲೀಸರು, ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸದಂತೆ ಕೋರಿದರು. ಅದೇ ವಿಚಾರವಾಗಿ ಮಾತಿನ ಚಕಮಕಿ ನಡೆಯಿತು. ನಂತರ, ಪ್ರತಿಭಟನಕಾರರನ್ನು ವಶಕ್ಕೆ ಪಡೆದ ಪೊಲೀಸರು ಜೀಪಿನಲ್ಲಿ ಕರೆದೊಯ್ದರು.
‘ಸ್ಥಳೀಯ ಶಾಸಕ ಎಸ್.ಟಿ. ಸೋಮಶೇಖರ್ ಅವರ ಪ್ರಭಾವಕ್ಕೆ ಒಳಗಾಗಿ ಪೊಲೀಸರು ಆಪ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಗುಂಡಿಯಿಂದಾದ ಶಿಕ್ಷಕಿ ಸಾವು ಖಂಡಿಸುವುದು ತಪ್ಪಾ. ಪ್ರತಿಭಟನೆ ನಡೆಸುವ ಹಕ್ಕಿಲ್ಲವೇ? ಪ್ರತಿಭಟನೆ ನಡೆಸಿದರೆ ವಶಕ್ಕೆ ಪಡೆಯುವುದು ಯಾವ ನ್ಯಾಯ’ ಪ್ರತಿಭಟನಕಾರರು ಪ್ರಶ್ನಿಸಿದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.