ನೆಲಮಂಗಲ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲ್ಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ.
ತಮ್ಮೇನಹಳ್ಳಿ ನಿವಾಸಿಗಳಾದ ಧ್ಯಾನ್ ರಾಜ್ (14), ಪ್ರಭಾಕರ್ (28) ಮೃತರು.
ಕ್ರಿಕೆಟ್ ಆಡುವ ವೇಳೆ ಚೆಂಡು ಕೃಷಿ ಹೊಂಡದಲ್ಲಿ ಬಿದ್ದಿದೆ. ಅದನ್ನು ತೆಗೆದುಕೊಳ್ಳುವ ಸಲುವಾಗಿ ಧ್ಯಾನ್ ರಾಜ್ ಕೃಷಿ ಹೊಂಡಕ್ಕೆ ಇಳಿದಿದ್ದು, ಈಜು ಬಾರದೆ ನೀರಿನಲ್ಲಿ ಮುಳುಗುತ್ತಿದ್ದ. ಪಕ್ಕದಲ್ಲೇ ಚಹಾ ಅಂಗಡಿ ಇಟ್ಟುಕೊಂಡಿದ್ದ ಪ್ರಭಾಕರ್ ಇದನ್ನು ಗಮನಿಸಿ, ಬಾಲಕನ ರಕ್ಷಣೆಗಾಗಿ ಕೃಷಿ ಹೊಂಡಕ್ಕೆ ಇಳಿದಿದ್ದಾರೆ.
ಆದರೆ, ಇಬ್ಬರೂ ನೀರಿನಿಂದ ಹೊರ ಬರಲಾಗದೇ ಕೃಷಿ ಹೊಂಡದಲ್ಲಿ ಜೀವ ಬಿಟ್ಟಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಶವಗಳನ್ನು ಹೊರತೆಗೆದರು.
ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.