ರಾಷ್ಟ್ರೀಯ ಆರೋಗ್ಯ ಅಭಿಯಾನ
ಬೆಂಗಳೂರು: ಸೇವಾ ಭದ್ರತೆ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಷ್ಕರ ಕೈಗೊಳ್ಳಲಾಗುವುದು ಎಂದು ಎನ್ಎಚ್ಎಂ (ರಾಷ್ಟ್ರೀಯ ಆರೋಗ್ಯ ಅಭಿಯಾನ) ನೌಕರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ಪತ್ರ ಬರೆದಿದೆ.
‘ಸರ್ಕಾರವು ಎನ್ಎಚ್ಎಂ ನೌಕರರಿಗೆ 2023ರ ಏಪ್ರಿಲ್ ತಿಂಗಳಿಂದ ಶೇ 15ರಷ್ಟು ವೇತನ ಹೆಚ್ಚಳ ಮಾಡಿ, ಆದೇಶ ಹೊರಡಿಸಿದೆ. ಆರ್ಥಿಕ ಇಲಾಖೆಯೂ ಸೆಪ್ಟೆಂಬರ್ ತಿಂಗಳಲ್ಲಿ ಆರೋಗ್ಯ ಇಲಾಖೆಗೆ ಅನುದಾನವನ್ನು ಬಿಡುಗಡೆ ಮಾಡಿತ್ತು. ಆದರೆ, ಈವರೆಗೂ ಅನುದಾನವನ್ನು ಇಲಾಖೆ ಹಾಗೂ ಎನ್ಎಚ್ಎಂ ಜಿಲ್ಲೆಗಳಿಗೆ ಬಿಡುಗಡೆ ಮಾಡಿಲ್ಲ. ಕೂಡಲೇ ಈ ಬಗ್ಗೆ ಕ್ರಮಕೈಗೊಳ್ಳಬೇಕು’ ಎಂದು ಸಂಘದ ಅಧ್ಯಕ್ಷ ಶ್ರೀಕಾಂತ ಸ್ವಾಮಿ ಆಗ್ರಹಿಸಿದ್ದಾರೆ.
‘ಜಿಲ್ಲೆಯಿಂದ ಜಿಲ್ಲೆಗೆ ವರ್ಗಾವಣೆ, ಹೊರಗುತ್ತಿಗೆ ನೌಕರರನ್ನು ಗುತ್ತಿಗೆ ನೌಕರರನ್ನಾಗಿ ನೇಮಕ ಮಾಡಿಕೊಳ್ಳುವುದು, ವೈದ್ಯಕೀಯ ವಿಮೆ ಜಾರಿ ಸೇರಿ ವಿವಿಧ ಬೇಡೆಕೆಗಳನ್ನು ಈಡೇರಿಸಬೇಕು. ಕೇಂದ್ರ ಸರ್ಕಾರದಿಂದ ಎನ್ಎಚ್ಎಂ ನೌಕರರ ಕ್ಷೇಮಾಭಿವೃದ್ಧಿಗೆ ಪ್ರತಿ ವರ್ಷ ₹ 7 ಕೋಟಿ ಅನುದಾನ ಬಿಡುಗಡೆಯಾಗುತ್ತಿದೆ. ಈ ಯೋಜನೆಗೂ ಸಹ ಯಾವುದೇ ನೀತಿ ನಿಯಮಗಳನ್ನು ರೂಪಿಸದೆ ಅನುದಾನವನ್ನು ಹಾಗೇ ಉಳಿಸಿಕೊಳ್ಳಲಾಗಿದೆ’ ಎಂದು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.