ADVERTISEMENT

ಬೆಂಗಳೂರಿನಲ್ಲಿ ಎನ್‌ಐಎ ಕಾರ್ಯಾಚರಣೆ: ಅಕ್ರಮ ವಾಸ, ಮೂವರು ಬಾಂಗ್ಲಾ ಪ್ರಜೆಗಳ ಬಂಧನ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2023, 15:33 IST
Last Updated 11 ಆಗಸ್ಟ್ 2023, 15:33 IST
ಬಂಧನ (ಸಾಂದರ್ಭಿಕ ಚಿತ್ರ)
ಬಂಧನ (ಸಾಂದರ್ಭಿಕ ಚಿತ್ರ)   

ಬೆಂಗಳೂರು: ದೇಶದೊಳಗೆ ಅಕ್ರಮವಾಗಿ ನುಸುಳಿದ್ದ ಬಾಂಗ್ಲಾದೇಶದ ಮೂವರು ಪ್ರಜೆಗಳನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ಸದ್ಯ ಮೂವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

‘ಅಬ್ದುಲ್ ಖಾದಿರ್ ತಾಲೂಕ್ದಾರ್, ಮೊಹಮ್ಮದ್ ಜಾಹೀದ್ ಹಾಗೂ ಖಲೀಲ್ ಚಪ್ರಾಸಿ ಬಂಧಿತರು. ಎನ್‌ಐಎ ಅಧಿಕಾರಿಗಳ ದೂರು ಆಧರಿಸಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

40 ಜನ ಅಕ್ರಮ ವಾಸ: ‘ಅಬ್ದುಲ್ ಖಾದಿರ್ ಹಾಗೂ ಇತರರು, ಮಧ್ಯವರ್ತಿಗಳಿಗೆ ತಲಾ ₹ 20 ಸಾವಿರ ನೀಡಿ ದೇಶದೊಳಗೆ ನುಸುಳಿದ್ದರು. ಬೆಂಗಳೂರಿಗೆ ಬಂದು, ನಕಲಿ ಗುರುತಿನ ಚೀಟಿಗಳನ್ನು ಮಾಡಿಸಿಕೊಂಡಿದ್ದರು’ ಎಂದು ಪೊಲೀಸರು ತಿಳಿಸಿದರು.

ADVERTISEMENT

‘ಅಬ್ದುಲ್ ಜೊತೆಯಲ್ಲಿ 40 ಮಂದಿ ಅಕ್ರಮವಾಗಿ ನುಸುಳಿದ್ದು, ಎಲ್ಲರೂ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಸ್ವಚ್ಛತೆ, ಕಾರ್ಮಿಕರಾಗಿ ಕೆಲಸ ಮಾಡಿ ಕೊಂಡಿದ್ದಾರೆ. ಇವರ ಹೆಸರು, ವಿವರಗಳನ್ನು ಎನ್‌ಐಎ ಅಧಿಕಾರಿಗಳು ಮಾಹಿತಿ ನೀಡಿದ್ದು, ಎಲ್ಲರನ್ನೂ ಪತ್ತೆ ಮಾಡಬೇಕಿದೆ’ ಎಂದು ಹೇಳಿದರು.

ತನಿಖೆ ವೇಳೆ ಮಾಹಿತಿ: ‘ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳಿಗೆ ಅಕ್ರಮ ವಾಸಿಗಳ ಬಗ್ಗೆ ಮಾಹಿತಿ ಸಿಕ್ಕಿತ್ತು. ಅದರನ್ವಯ ಕಾರ್ಯಾಚರಣೆ ನಡೆಸಿ ಅಕ್ರಮವಾಸಿಗಳನ್ನು ಪತ್ತೆ ಮಾಡಿದ್ದಾರೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.