ADVERTISEMENT

ಬೆಂಗಳೂರು ಕಾರಾಗೃಹ | ಉಗ್ರನ ಜತೆ ಸಂಪರ್ಕ ಪತ್ತೆ: ಆರೋಪಿಗಳ ಸಿಡಿಆರ್ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2025, 0:10 IST
Last Updated 14 ಜುಲೈ 2025, 0:10 IST
   

ಬೆಂಗಳೂರು: ಕೇಂದ್ರ ಕಾರಾಗೃಹದಲ್ಲಿ ಉಗ್ರರಿಗೆ ನೆರವು ನೀಡಿದ ಆರೋಪದಡಿ ಎನ್‌ಐಎ ಬಂಧಿಸಿರುವ ಮೂವರು ಆರೋಪಿಗಳ ಮೊಬೈಲ್‌ ಕರೆಗಳ ವಿವರ (ಸಿಡಿಆರ್) ಪರಿಶೀಲನೆ ನಡೆಸಿದ ವೇಳೆ, ಮಹತ್ವದ ಮಾಹಿತಿ ಲಭ್ಯವಾಗಿದೆ.  

ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ ನಾಗರಾಜ್, ಸಶಸ್ತ್ರ ಮೀಸಲು ಪಡೆಯ ಎಎಸ್ಐ ಚಾಂದ್ ಪಾಷಾ ಹಾಗೂ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಜುನೈದ್ ಅಹಮದ್‌ನ ತಾಯಿ ಅನೀಸ್ ಫಾತಿಮಾ ಅವರ ಮೊಬೈಲ್‌ ಕರೆ ವಿವರಗಳ ಪರಿಶೀಲನೆ ನಡೆಸಿದ್ದು, ಆರೋಪಿಗಳು ಯಾರ ಜತೆ ಸಂಪರ್ಕದಲ್ಲಿದ್ದರು? ಯಾರಿಗೆಲ್ಲಾ ಕರೆ ಮಾಡಿದ್ದರು? ಯಾರೊಂದಿಗೆ ಎಷ್ಟು ಗಂಟೆ ಮಾತನಾಡಿದ್ದರು? ಕೊನೆಯ ಬಾರಿಗೆ ಯಾರ ಜತೆ ಮಾತನಾಡಿದ್ದರು? ಎಂಬುದನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪತ್ತೆಹಚ್ಚಿದೆ. 

ಕರೆಗಳ ಮಾಹಿತಿಯ ಜಾಡು ಹಿಡಿದು ತನಿಖೆ ನಡೆಸಿದಾಗ, ಉಗ್ರ ಟಿ.ನಾಸಿರ್‌ ಸೂಚನೆಯಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಶಂಕಿತ ಉಗ್ರ ಜುನೈದ್‌ ಅಹ್ಮದ್, ತನ್ನ ತಾಯಿ ಫಾತಿಮಾಗೆ ಹಲವು ಬಾರಿ ಕರೆ ಮಾಡಿ ಗೋಪ್ಯ ಮಾತುಕತೆ ನಡೆಸಿರುವುದು ಪತ್ತೆಯಾಗಿದೆ.

ADVERTISEMENT

ಪುತ್ರನ ಜತೆಗಿನ ಮಾತುಕತೆ ವಿವರವನ್ನು ಫಾತಿಮಾ ಅವರು ಎಎಸ್‌ಐ ಚಾಂದ್ ಪಾಷಾ ಅವರೊಂದಿಗೆ ಹಂಚಿಕೊಳ್ಳುತ್ತಿದ್ದರು. ಬಳಿಕ ಪಾಷಾ ಅವರು ನಾಸಿರ್‌ಗೆ ವಿಷಯ ತಲುಪಿಸುತ್ತಿದ್ದರು ಎಂಬುದು ಎನ್‌ಐಎ ತನಿಖೆಯಲ್ಲಿ ಗೊತ್ತಾಗಿದೆ.

ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡಿರುವ ತನಿಖಾಧಿಕಾರಿಗಳು, ಆರೋಪಿಗಳು ಸಂಪರ್ಕದಲ್ಲಿದ್ದವರ ಪಟ್ಟಿ ಸಿದ್ಧಪಡಿಸಿದ್ದಾರೆ. ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಿದ್ದಾರೆ ಎನ್ನಲಾಗಿದೆ.

ಆರೋಪಿಗಳ ಪೊಲೀಸ್ ಕಸ್ಟಡಿ ಸೋಮವಾರ ಅಂತ್ಯಗೊಳ್ಳಲಿದ್ದು, ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ತನಿಖೆ ವೇಳೆ ಲಭ್ಯವಾಗಿರುವ ಬಲವಾದ ಸಾಕ್ಷ್ಯಾಧಾರಗಳನ್ನು ಅಧಿಕಾರಿಗಳು  ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಮತ್ತೆ ಒಂದು ವಾರ ಕಸ್ಟಡಿಗೆ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.