ಬೆಂಗಳೂರು: ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) ಶಾಖೆಯನ್ನು ಉತ್ತರ ಬೆಂಗಳೂರಿನಲ್ಲಿ ಪ್ರಾರಂಭಿಸಲಾಗುತ್ತಿದ್ದು, ಒಂದು ವರ್ಷದಲ್ಲಿ ಕಟ್ಟಡ ತಲೆಯೆತ್ತಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇದರ ಶಂಕುಸ್ಥಾಪನೆಯನ್ನು ಶುಕ್ರವಾರ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಎಲ್ಲ ರೀತಿಯಲ್ಲಿಯೂ ಸಹಕಾರ ನೀಡಲಿದೆ‘ ಎಂದರು.
ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ‘ಸದ್ಯದ ಪರಿಸ್ಥಿತಿಯಲ್ಲಿ ಮಾನಸಿಕ ಆರೋಗ್ಯ ಚಿಕಿತ್ಸಾ ಸೇವೆಯನ್ನು
ವಿಸ್ತರಿಸಬೇಕಾದ ಅಗತ್ಯ ಇದೆ' ಎಂದರು.
ಇ–ಮನಸ್ ತಂತ್ರಾಂಶ: ಮಾನಸಿಕ ಆರೋಗ್ಯ ಸೇವೆ ನಿರ್ವಹಿಸಲು ಐಐಐಟಿ ಬೆಂಗಳೂರು ಹಾಗೂ ನಿಮ್ಹಾನ್ಸ್ ಸಂಸ್ಥೆ ಸಹಯೋಗದಲ್ಲಿ ರಾಜ್ಯ ಸರ್ಕಾರ ಐಟಿ ಆಧಾರಿತ ಡಿಜಿಟಲ್ ವೇದಿಕೆ ಅಭಿವೃದ್ಧಿಪಡಿಸಿದೆ. ಕಾರ್ಯಕ್ರಮದಲ್ಲಿ ಕರ್ನಾಟಕ ಮಾನಸಿಕ ಆರೋಗ್ಯ ನಿರ್ವಹಣಾ ವ್ಯವಸ್ಥೆಗೆ (ಇ–ಮನಸ್) ಚಾಲನೆ ನೀಡಲಾಯಿತು. ಈ ತಂತ್ರಾಂಶದ ಮೂಲಕ ಆಸ್ಪತ್ರೆಗಳು ಹಾಗೂ ಮಾನಸಿಕ ಆರೋಗ್ಯ ತಜ್ಞರು ಹೆಸರು ನೋಂದಾಯಿಸಿಕೊಂಡು ಸೇವೆ ನೀಡಬಹುದು.
‘ಮಾನಸಿಕ ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವವರಿಗೆ ಇ–ಮನಸ್ ತಂತ್ರಾಂಶದಿಂದ ಸುಲಭವಾಗಿ ಸೇವೆ ಸಿಗಲಿದೆ’ ಎಂದು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.