ಬೆಂಗಳೂರು: ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ 55 ವರ್ಷ ದಾಟಿದ ಪೊಲೀಸ್ ಸಿಬ್ಬಂದಿಯನ್ನು ಕೊರೊನಾ ವೈರಸ್ ಹರಡದಂತೆ ತಡೆಯುವ ಕರ್ತವ್ಯಗಳಿಗೆ ನಿಯೋಜಿಸದಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸೂಚಿಸಿದ್ದಾರೆ.
ಮಧುಮೇಹ, ರಕ್ತದೊತ್ತಡ, ಅಸ್ತಮಾ, ಕಿಡ್ನಿ ಹಾಗೂ ಯಕೃತ್ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಸಿಬ್ಬಂದಿಯನ್ನು ಆರೋಗ್ಯದ ದೃಷ್ಟಿಯಿಂದ ರಸ್ತೆಗಳಲ್ಲಿ ಕರ್ತವ್ಯ ನಿರ್ವಹಿಸಲು ನಿಯೋಜಿಸಬಾರದು. ಪೊಲೀಸ್ ಠಾಣೆ ಒಳಗೆ ಅಥವಾ ಸುರಕ್ಷಿತ ಸ್ಥಳಗಳಲ್ಲಿ ಕರ್ತವ್ಯಕ್ಕೆ ಹಾಕಬೇಕು ಎಂದೂ ಆದೇಶದಲ್ಲಿ ಅವರು ತಿಳಿಸಿದ್ದಾರೆ.
ವಯಸ್ಸಾದವರನ್ನು ಮತ್ತು ಕಾಯಿಲೆ ಇರುವವರಿಗೆ ಕೊರೊನಾ ಸೋಂಕು ಬೇಗ ತಗಲುತ್ತದೆ. ಸಿಬ್ಬಂದಿಯ ಆರೋಗ್ಯ ಕಾಪಾಡುವುದು ನಮ್ಮ ಪ್ರಾಥಮಿಕ ಆದ್ಯತೆ. ಹೀಗಾಗಿ, 55 ವರ್ಷ ದಾಟಿದವರನ್ನು ಕೋವಿಡ್ ನಿಯಂತ್ರಣ ಉದ್ದೇಶಕ್ಕೆ ರಸ್ತೆ, ಚೆಕ್ ಪೋಸ್ಟ್ಗಳಲ್ಲಿ ಕರ್ತವ್ಯಕ್ಕೆ ಹಾಕಬಾರದು. ಸ್ಟೇಷನ್ ಒಳಗೆ ಅಥವಾ ಸುರಕ್ಷಿತ ಸ್ಥಳಗಳಲ್ಲಿ ಕರ್ತವ್ಯಕ್ಕೆ ನಿಯೋಜಿಸಬೇಕು ಎಂದು ರಾಜ್ಯದ ಎಲ್ಲ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳಿಗೆ ಸೂದ್ ಸೂಚಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.