ADVERTISEMENT

ಗಣರಾಜ್ಯೋತ್ಸವ: ಸಾರ್ವಜನಿಕರಿಗೆ ಪ್ರವೇಶವಿಲ್ಲ

ಸರಳ ಆಚರಣೆಗೆ ತೀರ್ಮಾನ * ಸಾಂಸ್ಕೃತಿಕ ಕಾರ್ಯಕ್ರಮವೂ ಇಲ್ಲ

​ಪ್ರಜಾವಾಣಿ ವಾರ್ತೆ
Published 24 ಜನವರಿ 2021, 19:37 IST
Last Updated 24 ಜನವರಿ 2021, 19:37 IST
ಗಣರಾಜ್ಯೋತ್ಸವದಲ್ಲಿ ವಿದ್ಯಾರ್ಥಿಗಳ ಪಥಸಂಚಲನ
ಗಣರಾಜ್ಯೋತ್ಸವದಲ್ಲಿ ವಿದ್ಯಾರ್ಥಿಗಳ ಪಥಸಂಚಲನ    

ಬೆಂಗಳೂರು: ‘ಕೋವಿಡ್‌ ಕಾರಣದಿಂದ ಈ ಬಾರಿ ಗಣರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗುವುದು. ಫೀಲ್ಡ್‌ ಮಾರ್ಷಲ್‌ ಮಾಣೆಕ್‌ ಷಾ ಪರೇಡ್ ಮೈದಾನಕ್ಕೆ ಈ ಬಾರಿ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯುವುದಿಲ್ಲ’ ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ ಪ್ರಸಾದ್ ಹೇಳಿದರು.

‘ಇಡೀ ಕಾರ್ಯಕ್ರಮ 40 ನಿಮಿಷದಲ್ಲಿ ಮುಗಿಯಲಿದೆ. ಮಂಗಳವಾರ ಬೆಳಿಗ್ಗೆ 9ಕ್ಕೆ ರಾಜ್ಯಪಾಲರು ರಾಷ್ಟ್ರಧ್ವಜಾರೋಹಣ ಮಾಡುತ್ತಾರೆ. ಗೌರವ ರಕ್ಷೆ ಸ್ವೀಕರಿಸಿ, ರಾಜ್ಯದ ಜನರಿಗೆ 71ನೇ ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ’ ಎಂದು ಭಾನುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

21 ತುಕಡಿಗಳಿಂದ ಪಥಸಂಚಲನ

ADVERTISEMENT

ಕೆಎಸ್‌ಆರ್‌ಪಿ, ಸಿಆರ್‌ಪಿಎಫ್‌, ಬಿಎಸ್ಎಫ್, ಸಂಚಾರ ಪೊಲೀಸರು, ಅಗ್ನಿಶಾಮಕ ದಳ, ಶ್ವಾನದಳ ಮತ್ತು ಬ್ಯಾಂಡ್‌ ಸೇರಿದಂತೆ ಒಟ್ಟು 21 ತುಕಡಿಗಳಲ್ಲಿ 750 ಮಂದಿ ಪಥಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ.

500 ಆಸನ ವ್ಯವಸ್ಥೆ: ಅತಿಗಣ್ಯ, ಗಣ್ಯ ಮತ್ತು ಇತರೆ ಆಹ್ವಾನಿತರಿಗೆ 500 ಆಸನ ವ್ಯವಸ್ಥೆ ಕಲ್ಪಿಸಲಾಗಿದೆ‌. ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ಆಹ್ವಾನಿತರು ಕಡ್ಡಾಯವಾಗಿ ಮುಖಗವಸು ಧರಿಸಬೇಕು ಮತ್ತು ಅಂತರ ಕಾಪಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಕಾರ್ಯಕ್ರಮದ ನೇರಪ್ರಸಾರಕ್ಕೂ ವ್ಯವಸ್ಥೆ ಮಾಡಲಾಗಿದೆ.

ವಿಪತ್ತು ನಿರ್ವಹಣೆಗೆ ಸಜ್ಜು

ಕಾರ್ಯಕ್ರಮದ ವೇಳೆ ಯಾವುದೇ ಆಕಸ್ಮಿಕ ವಿಪತ್ತು ಸಂಭವಿಸಿದಲ್ಲಿ ತಕ್ಷಣ ಪ್ರತಿಕ್ರಿಯಿಸಲು ಅಗತ್ಯವಿರುವಷ್ಟು ಆಂಬುಲೆನ್ಸ್‌ಗಳನ್ನು ಹಾಗೂ ವೈದ್ಯಕೀಯ ಮತ್ತು ವೈದ್ಯಕೀಯೇತರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ನಗರದ ಹಲವು ಆಸ್ಪತ್ರೆಗಳನ್ನು ಗುರುತಿಸಿ, ಸಾಕಷ್ಟು ಸಂಖ್ಯೆಯಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ ಎಂದು ಹೇಳಿದರು.

ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ, ಜಂಟಿ ಪೊಲೀಸ್‌ ಕಮಿಷನರ್ ಡಾ. ಬಿ.ಆರ್. ರವಿಕಾಂತೇಗೌಡ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.