ADVERTISEMENT

‘ಅಧಿಕಾರಿಗಳ ವಿರುದ್ಧ ಆತುರದ ಕ್ರಮ ಬೇಡ’

ಕಾನೂನು ಬಾಹಿರವಾಗಿ ಸರ್ಕಾರಿ ಜಮೀನು ಮಾರಾಟ ಆರೋಪ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2019, 19:46 IST
Last Updated 13 ಡಿಸೆಂಬರ್ 2019, 19:46 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ವರ್ತೂರುಹೋಬಳಿಯ ಮುಳ್ಳೂರು ಗ್ರಾಮದ ಸರ್ಕಾರಿ ಜಮೀನನ್ನು ಖಾಸಗಿಯವರಿಗೆ ಕಾನೂನುಬಾಹಿರವಾಗಿ ಮಾರಾಟ ಮಾಡಲು ಸಹಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪ ನೋಂದಣಾಧಿಕಾರಿ ಎಂ.ಕೆ.ಶಾಂತಮೂರ್ತಿ ಹಾಗೂ ಜೆಡಿಎಲ್‌ಆರ್ (ಭೂದಾಖಲೆಗಳ ಜಂಟಿ ನಿರ್ದೇಶಕರು) ಪಿ.ಎಸ್. ಕುಸುಮಲತಾ ವಿರುದ್ಧ ಯಾವುದೇ ಆತುರದ ಕ್ರಮ ಜರುಗಿಸ ಬಾರದು’ ಎಂದು ಹೈಕೋರ್ಟ್ ಆದೇಶಿಸಿದೆ.

ಈ ಬಗ್ಗೆ ಈ ಇಬ್ಬರೂ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿ, ಈ ಮಧ್ಯಂತರ ಆದೇಶ ನೀಡಿದ್ದು, ಪ್ರತಿವಾದಿ ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.

ಅರ್ಜಿದಾರರ ಪರ ವಕೀಲ ಎಂ.ಎಸ್. ಭಾಗವತ್, ‘ಅರ್ಜಿದಾರರು ತಹಶೀಲ್ದಾರ್ ಮತ್ತು ಭೂದಾಖಲೆಗಳ ಸಹಾಯಕ ನಿರ್ದೇಶಕರು ಮಾಡಿರುವ ಪೋಡಿಗೆ ಸಹಿ ಹಾಕಿದ್ದಾರಷ್ಟೇ. ಪ್ರಕರಣ ದಲ್ಲಿ ಅರ್ಜಿದಾರರನ್ನು ಅನಗತ್ಯವಾಗಿ ಸಿಲುಕಿಸಲಾಗಿದೆ’ ಎಂದರು.

ADVERTISEMENT

‘ಅರ್ಜಿದಾರರೇ ಅಕ್ರಮವಾಗಿ ಸರ್ಕಾರಿ ಭೂಮಿಯನ್ನು ಖಾಸಗಿ ಯವರಿಗೆ ವರ್ಗಾವಣೆ ಮಾಡಿದ್ದಾರೆ ಎನ್ನುವುದಕ್ಕೆ ಯಾವುದೇ ಆಧಾರವಿಲ್ಲ. ಅಂತೆಯೇ ಈ ಪ್ರಕರಣದಲ್ಲಿ ಪೊಲೀಸ ರಿಗೆ ದೂರು ದಾಖಲಿಸುವ ಅಧಿಕಾರವೂ ಇಲ್ಲ. ಹಾಗಾಗಿ ಅವರ ವಿರುದ್ಧ ದಾಖಲಿಸ ಲಾಗಿರುವ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಬೇಕು’ ಎಂದು ಕೋರಿದರು.

ಪ್ರಕರಣವೇನು?: ಮುಳ್ಳೂರು ಗ್ರಾಮದ ಸರ್ವೆ ನಂಬರ್‌ 49ರ (ಹೊಸ ನಂಬರ್‌ 114) 73 ಎಕರೆ ಜಮೀನಿನಲ್ಲಿ 10 ಎಕರೆಯನ್ನು ಮಾತ್ರ ನೈಜ ಫಲಾನುಭವಿ ಗಳಿಗೆ ನೀಡಿ, ಉಳಿದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಮಾರಾಟ ಮಾಡಲು ಸಹಕರಿಸಿದ ಆರೋಪವನ್ನು ಈ ಅಧಿಕಾರಿಗಳು ಎದುರಿಸುತ್ತಿದ್ದಾರೆ.

ಈ ಕುರಿತು ಬೆಂಗಳೂರು ಉತ್ತರಉಪ ವಿಭಾಗಾಧಿಕಾರಿ ದಯಾನಂದ ಭಂಡಾರಿ ವಿಚಾರಣೆ ನಡೆಸಿ ವರದಿ ನೀಡಿ ದ್ದರು. ಇದರ ಅನುಸಾರ ಬೆಂಗಳೂರು ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

‘ಜಮೀನಿನ ಮಾರುಕಟ್ಟೆ ಬೆಲೆ₹ 1,250 ಕೋಟಿಗೂ ಹೆಚ್ಚು’ ಎಂದು ಕಂದಾಯ ಇಲಾಖೆ ಅಂದಾಜಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.