ಬೆಂಗಳೂರು: ‘ಕೋವಿಡ್ ಕಾರಣ ಡಿಸೆಂಬರ್ನಲ್ಲಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಪುನರಾರಂಭಿಸುವುದು ಸೂಕ್ತವಲ್ಲ’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸಲಹೆ ನೀಡಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಆನ್ಲೈನ್ ಮೂಲಕ ಪಾಲ್ಗೊಂಡ ಸುಧಾಕರ್, ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸು ಹಾಗೂ ತಮ್ಮ ಅಭಿಪ್ರಾಯವನ್ನು ತಿಳಿಸಿದರು.
‘ಡಿಸೆಂಬರ್ ಚಳಿಗಾಲ ಆಗಿದ್ದು, ಸೋಂಕು ಹರಡಲು ಅನುಕೂಲ ಮಾಡಿಕೊಡಬಹುದು. ಕೊರೊನಾದ ಎರಡನೇ ಅಲೆಯೂ ಬರಲಿದೆ ಎಂಬ ಸುದ್ದಿಯೂ ಇರುವುದರಿಂದ ಮುಂದಾಲೋಚನೆ ಮಾಡಬೇಕಿದೆ. ಈ ಕುರಿತು ತಾಂತ್ರಿಕ ಸಲಹಾ ಸಮಿತಿಯ ಸಭೆಯಲ್ಲಿ ಕೂಡ ಚರ್ಚೆಯಾಗಿದ್ದು, ಈಗಾಗಲೇ ಸಭೆಯ ನಿರ್ಣಯವನ್ನು ಸರ್ಕಾರಕ್ಕೆ ತಿಳಿಸಲಾಗಿದೆ’ ಎಂದು ಸಚಿವರು ಹೇಳಿದರು.
‘ಶಾಲೆ ಪುನರಾರಂಭಕ್ಕೆ ಸಂಬಂಧಿಸಿದಂತೆ, ಡಿಸೆಂಬರ್ ಮೂರನೇ ವಾರದಲ್ಲಿ ಸಭೆ ನಡೆಸಿ, ಆ ಸಮಯದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಿ ತೀರ್ಮಾನ ಕೈಗೊಳ್ಳಬಹುದು’ ಎಂದು ಸಚಿವರು ಸಭೆಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.