ಬೆಂಗಳೂರು: ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್ಪಿಎಸ್) ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸ್ವಾಯತ್ತ ಸಂಸ್ಥೆಗಳ ನೌಕರರು ಒತ್ತಾಯಿಸಿದ್ದಾರೆ. ಆ.10ರೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಕಪ್ಪುಪಟ್ಟಿ ಧರಿಸಿ ಸೇವೆ ಸಲ್ಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಈ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಕೀಯ ಸ್ವಾಯತ್ತ ಸಂಸ್ಥೆಗಳ ಬೋಧಕೇತರ ನೌಕರರ ಸಂಘವು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದೆ. ‘ಸರ್ಕಾರವು ತನ್ನ ನೌಕರರಿಗೆ ನೀಡಿದ ವಿವಿಧ ಸೌಲಭ್ಯಗಳನ್ನು ಸ್ವಾಯತ್ತ ಸಂಸ್ಥೆಗಳ ನೌಕರರಿಗೆ ನೀಡುತ್ತಿಲ್ಲ. ಈಗಾಗಲೇ ಹಲವು ಬಾರಿ ಮನ leವಿ ಸಲ್ಲಿಸಲಾಗಿದೆ. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ. ಕೋವಿಡ್ ಸಂದರ್ಭದಲ್ಲಿ ನಮ್ಮ ಸೇವೆಯನ್ನು ಮನಗಂಡು ಇನ್ನಾ ದರೂ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಸಂಘವು ಪತ್ರದಲ್ಲಿ ತಿಳಿಸಿದೆ.
‘ನೌಕರರು ಹಾಗೂ ಕುಟುಂಬ ಸದಸ್ಯರಿಗೆ ಯಾವುದೇ ಸುರಕ್ಷತೆಯಿಲ್ಲ. ರಾಜ್ಯ ಸರ್ಕಾರದ ‘ಜ್ಯೋತಿ ಸಂಜೀವಿನಿ’ ಅಥವಾ ಸರ್ಕಾರಿ ನೌಕರರಿಗೆ ಲಭ್ಯವಿರುವ ಯಾವುದೇ ನಗದುರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ನಮಗೆ ಅನ್ವಯವಾಗುತ್ತಿಲ್ಲ. ನಾವು ಹಾಗೂ ನಮ್ಮ ಕುಟುಂಬದ ಸದಸ್ಯರು ಸೋಂಕಿತರಾದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಹಣ ಪಾವತಿಸಿ ಚಿಕಿತ್ಸೆ ಪಡೆಯಬೇಕಾಗಿದ್ದು, ಇದರಿಂದ ಆರ್ಥಿಕ ಹೊರೆಯಾಗಲಿದೆ’ ಎಂದು ಸಂಘ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.