ಬೆಂಗಳೂರು: ಎಂಟು ಮತ್ತು ಒಂಬತ್ತನೇ ತರಗತಿಯ ವಿದ್ಯಾರ್ಥಿಗಳನ್ನು ಶಾಲೆಗೆ ಕರೆಸಿ ಪರೀಕ್ಷೆ ನಡೆಸಿದ್ದ ಕನಕಪುರ ರಸ್ತೆಯ ಜ್ಯೋತಿ ವಿದ್ಯಾಕೇಂದ್ರಕ್ಕೆ ನೋಟಿಸ್ ನೀಡಲಾಗಿದೆ.
‘ಸರ್ಕಾರ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಮುಂದಿನ ತರಗತಿಗೆ ಉತ್ತೀರ್ಣ ಮಾಡಬೇಕು ಎಂದು ಸರ್ಕಾರದ ಆದೇಶವಿದೆ. ಆದರೂ, ವಿದ್ಯಾರ್ಥಿಗಳನ್ನು ಶಾಲೆಗೆ ಕರೆಸಿ ಪರೀಕ್ಷೆ ನಡೆಸಿರುವುದು ಗಮನಕ್ಕೆ ಬಂದಿದೆ. ಶಾಲೆಗೆ ನೋಟಿಸ್ ನೀಡಲಾಗಿದೆಯಲ್ಲದೆ ಈ ಕುರಿತು ವರದಿ ನೀಡುವಂತೆ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದ್ದೇನೆ’ ಎಂದು ಬೆಂಗಳೂರು ದಕ್ಷಿಣ ಡಿಡಿಪಿಐ ಅಶ್ವತ್ಥ್ ನಾರಾಯಣ ‘ಪ್ರಜಾವಾಣಿ’ಗೆ ತಿಳಿಸಿದರು.
‘ತರಗತಿ ನಡೆಸುವುದಕ್ಕೇ ಅವಕಾಶ ನೀಡಿಲ್ಲ. ಇಂತಹ ಸಂದರ್ಭದಲ್ಲಿ ಪರೀಕ್ಷೆ ನಡೆಸಿರುವುದು ಸರಿಯಲ್ಲ. ಸಮಾಜಕ್ಕಿಂತ ಮಿಗಿಲಾದವರು ಯಾರೂ ಇಲ್ಲ. ನೋಟಿಸ್ಗೆ ಉತ್ತರ ಕೊಡಲು ಹೇಳಿದ್ದೇವೆ. ಪರೀಕ್ಷೆ ನಡೆಸಲು ಕಾರಣವೇನು ಎಂದು ತಿಳಿದುಕೊಳ್ಳಲಾಗುವುದು. ಸರ್ಕಾರದ ಆದೇಶ ಉಲ್ಲಂಘಿಸಿದ್ದರೆ, ಶಾಲೆಯ ಪರವಾನಗಿ ರದ್ದು ಮಾಡುವಂತೆ ಆಯುಕ್ತರಿಗೆ ಶಿಫಾರಸು ಮಾಡಲಾಗುವುದು’ ಎಂದು ಅವರು ಹೇಳಿದರು.
‘ಪರೀಕ್ಷೆ ಹಮ್ಮಿಕೊಂಡ ಖಾಸಗಿ ಶಾಲೆ’ ಶೀರ್ಷಿಕೆಯಡಿ ‘ಪ್ರಜಾವಾಣಿ’ಯಲ್ಲಿ ಸೋಮವಾರ ಸುದ್ದಿ ಪ್ರಕಟವಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.