ಬೆಂಗಳೂರು: ‘ಸದ್ಯದ ಪರಿಸ್ಥಿತಿಯಲ್ಲಿ ಅಧಿಕಾರಿಗಳು ರಾಜಕೀಯ ಮರ್ಜಿಗೆ ಒಳಗಾಗುತ್ತಿದ್ದಾರೆ. ರಾಜಕೀಯ ಮರ್ಜಿಗೆ ಒಳಗಾದರೆ ಉತ್ತಮ ಆಡಳಿತ ನೀಡಲು ಸಾಧ್ಯವಿಲ್ಲ’ ಎಂದು ಸಾಹಿತಿ ಗೊ.ರು.ಚನ್ನಬಸಪ್ಪ ಹೇಳಿದರು.
ನಗರದಲ್ಲಿ ಭಾನುವಾರ ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆ ಆಯೋಜಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ‘ಟಿ.ತಿಮ್ಮೇಗೌಡರ ಬಹುಮುಖಿ ಚಿಂತನೆಗಳು’ ಕುರಿತು ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
ಅಧಿಕಾರವನ್ನು ಹೊಣೆಗಾರಿಕೆ ಎಂದು ಭಾವಿಸಿ ಕರ್ತವ್ಯ ನಿರ್ವಹಿಸಿದಾಗ ಮಾತ್ರ ಜನಪರವಾಗಿ ಕೆಲಸ ಮಾಡಲು ಸಾಧ್ಯ ಎಂದು ಹೇಳಿದರು.
ಕೆಲಸದಿಂದ ನುಣುಚಿಕೊಂಡರೆ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಸಾಧ್ಯವಾಗಲ್ಲ ಎಂದು ಎಚ್ಚರಿಸಿದರು.
ಆಡಳಿತದಲ್ಲಿ ನೈತಿಕ ಪ್ರಜ್ಞೆ ಇಟ್ಟುಕೊಂಡು ಸಮರ್ಪಣಾ ಭಾವದಿಂದ ಕೆಲಸ ಮಾಡಬೇಕು ಎಂಬುದಕ್ಕೆ ತಿಮ್ಮೇಗೌಡರು ಮಾದರಿ ಎಂದರು.
ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಹಿ.ಚಿ.ಬೋರಲಿಂಗಯ್ಯ ಮಾತನಾಡಿ, ಅನ್ಯ ರಾಜ್ಯದಿಂದ ಬಂದ ಐಎಎಸ್ ಅಧಿಕಾರಿಗಳು ಇಲ್ಲಿನ ನೆಲ, ಜಲ, ಸಂಸ್ಕೃತಿಗಳ ಪ್ರೀತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ವೇದಿಕೆ ಅಧ್ಯಕ್ಷ ಜೀವನ್ಮುಖಿ ಸುರೇಶ್ ಇದ್ದರು. ಟಿ. ತಿಮ್ಮೇಗೌಡ ಅವರನ್ನು ಗೌರವಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.