ADVERTISEMENT

ರೈತರ ಸಮಸ್ಯೆಗಳಿಗೆ ತಿಂಗಳ ಒಳಗೆ ಪರಿಹಾರ: ಬಿಡಿಎ ಅಧ್ಯಕ್ಷ ಭರವಸೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2021, 17:06 IST
Last Updated 4 ಅಕ್ಟೋಬರ್ 2021, 17:06 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ‘ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಭೂಮಿ ಬಿಟ್ಟುಕೊಟ್ಟ ರೈತರಿಗೆ ಅಭಿವೃದ್ಧಿಪಡಿಸಿದ ನಿವೇಶನ ಹಂಚಿಕೆ ಹಾಗೂ ಭೂಸ್ವಾಧೀನಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ತಿಂಗಳೊಳಗೆ ಪರಿಹರ ಒದಗಿಸಲಿದ್ದೇವೆ’ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಭರವಸೆ ನೀಡಿದರು.

ಸಚಿವ ಎಸ್.ಟಿ.ಸೋಮಶೇಖರ್ ಜೊತೆ ಸೇರಿ ಸೋಮವಾರ ಸಭೆ ನಡೆಸಿದ ಅವರು, ಈ ಬಡಾವಣೆಗೆ ಭೂಮಿ ನೀಡಿರುವ ರೈತರ ಸಮಸ್ಯೆಗಳನ್ನು ಆಲಿಸಿದರು. ಭೂಮಿ ನೀಡಿದವರಿಗೆ ಅಭಿವೃದ್ಧಿಪಡಿಸಿದ ನಿವೇಶನ ಹಂಚಿಕೆಯಲ್ಲಿ ವಿಳಂಬ, ಕಡತ ವಿಲೇವಾರಿಗೆ ಅಲೆದಾಡಿಸುವುದು ಸೇರಿದಂತೆ ಹಲವಾರು ಸಮಸ್ಯೆಗಳ ಬಗ್ಗೆ ರೈತರು ಗಮನ ಸೆಳೆದರು.

ಎಸ್.ಟಿ.ಸೋಮಶೇಖರ್, ‘ನನ್ನ ಮತಕ್ಷೇತ್ರದ 14 ಗ್ರಾಮಗಳ ರೈತರು ಕೆಂಪೇಗೌಡ ಬಡಾವಣೆಗೆ ಭೂಮಿಯನ್ನು ನೀಡಿದ್ದಾರೆ. ಐದಾರು ವರ್ಷಗಳ ಬಳಿಕವೂ ಅವರಿಗೆ ಪ್ರೋತ್ಸಾಹ ಯೋಜನೆಯಡಿ ಅಭಿವೃದ್ಧಿಪಡಿಸಿದ ನಿವೇಶನ ನೀಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

‘ರೈತರ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಬಗೆಹರಿಸಬೇಕು. ಅವರಿಗೆ ಯಾವುದೇ ತೊಂದರೆಗಳನ್ನು ನೀಡದೇ ಕೆಲಸಗಳನ್ನು ಮಾಡಿಕೊಡಬೇಕು. ಅವರಿಗೆ ಅಗೌರವ ತೋರುವುದನ್ನು ಸಹಿಸುವುದಿಲ್ಲ’ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

‘ರೈತರು ನೀಡಿರುವ ಜಮೀನಿನಲ್ಲಿಯೇ ಅವರಿಗೆ ಪ್ರೋತ್ಸಾಹಕ ಯೋಜನೆಯಡಿ ನಿವೇಶನ ನೀಡಲು ಆದ್ಯತೆ ನೀಡುತ್ತೇವೆ. ಅವರ ಜಮೀನಿನಲ್ಲಿ ನಿವೇಶನ ಲಭ್ಯವಿಲ್ಲದಿದ್ದರೆ ಅದರ ಸನಿಹದಲ್ಲಿಯೇ ನಿವೇಶನ ಹಂಚಿಕೆ ಮಾಡಲು ಪ್ರಯತ್ನಿಸುತ್ತೇವೆ’ ಎಂದು ಎಸ್.ಆರ್.ವಿಶ್ವನಾಥ್ ಭರವಸೆ ನೀಡಿದರು.

ಬಿಡಿಎ ಆಯುಕ್ತ ಎಂ.ಬಿ.ರಾಜೇಶ್ ಗೌಡ, ಕಾರ್ಯದರ್ಶಿ ಆನಂದ, ರೈತ ಮುಖಂಡರಾದ ಚನ್ನಪ್ಪ, ಕೃಷ್ಣಪ್ಪ ಮೊದಲಾದವರು ಸಭೆಯಲ್ಲಿ ಭಾಗವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.