ADVERTISEMENT

ಮೂರು ಅಂತಸ್ತಿನ ಕಟ್ಟಡ: ಒಸಿಗೆ ವಿನಾಯಿತಿ

ಕಾಯ್ದೆಗೆ ತಿದ್ದುಪಡಿ ತರಲು ನಗರಾಭಿವೃದ್ಧಿ ಇಲಾಖೆಯಿಂದ ಪ್ರಸ್ತಾವ

​ಪ್ರಜಾವಾಣಿ ವಾರ್ತೆ
Published 15 ಜುಲೈ 2025, 23:48 IST
Last Updated 15 ಜುಲೈ 2025, 23:48 IST
<div class="paragraphs"><p>ಕಡತ</p></div>

ಕಡತ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ರಾಜ್ಯದಲ್ಲಿನ ಎಲ್ಲ ಕಡೆ 1200 ಚದರಡಿ ನಿವೇಶನಗಳಲ್ಲಿ ಇರುವ ಮೂರು ಅಂತಸ್ತಿನ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ (ಒಸಿ) ಪಡೆಯುವುದಕ್ಕೆ ವಿನಾಯಿತಿ ನೀಡಲು ನಗರಾಭಿವೃದ್ಧಿ ಇಲಾಖೆ ತೀರ್ಮಾನಿಸಿದೆ.

ADVERTISEMENT

ಇದಕ್ಕೆ ಸಂಬಂಧಿಸಿದಂತೆ, ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ (ಜಿಬಿಎ)– 2024, ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976 (ಕೆಎಂಸಿ ಕಾಯ್ದೆ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಮಾದರಿ ಕಟ್ಟಡ ಬೈ–ಲಾಗಳನ್ನು ತಿದ್ದುಪಡಿ ಮಾಡಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.

1200 ಚದರಡಿ ವಿಸ್ತೀರ್ಣದ ನಿವೇಶನದಲ್ಲಿ ನೆಲ ಅಂತಸ್ತು + ಎರಡು ಅಂತಸ್ತು ಅಥವಾ ಸ್ಟಿಲ್ಟ್‌ + ಮೂರು ಅಂತಸ್ತಿನವರೆಗಿನ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಲಾಗುತ್ತದೆ.

ಜಿಬಿಎ–2024 ಕಾಯ್ದೆಯಲ್ಲಿ ಒಸಿಗೆ ವಿನಾಯಿತಿ ನೀಡಲು ಸರ್ಕಾರ ಅಧಿಸೂಚನೆ ಹೊರಡಿಸಬಹುದು ಎಂದು ಸೆಕ್ಷನ್‌ 241(7)ರಲ್ಲಿ ಹೇಳಲಾಗಿದೆ. ಆದರೆ, ಬಿಬಿಎಂಪಿ ಕಾಯ್ದೆ–2020, ಕೆಎಂಸಿ– 1976 ಕಾಯ್ದೆ, ಕರ್ನಾಟಕ ಪುರಸಭೆ ಕಾಯ್ದೆ 1964ರಲ್ಲಿ ಈ ಅವಕಾಶ ಇರುವುದಿಲ್ಲ.  

ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಉಪಮುಖ್ಯಮಂತ್ರಿ, ಸಂಸದೀಯ ವ್ಯವಹಾರಗಳ ಸಚಿವರು, ಆಹಾರ, ಕೈಗಾರಿಕೆ, ಇಂಧನ, ಕಂದಾಯ, ನಗರಾಭಿವೃದ್ಧಿ, ಪೌರಾಡಳಿತ ಸಚಿವರೊಂದಿಗೆ ನಡೆದ ಸಭೆಯಲ್ಲಿ ಎಲ್ಲ ಕಾಯ್ದೆಗಳಲ್ಲೂ ಸಮಾನಾಂತರ ಅವಕಾಶಗಳು ಇರಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆದ್ದರಿಂದ, ಒಸಿಗೆ ವಿನಾಯಿತಿ ನೀಡಲು ನಿಯಮಗಳನ್ನು ರಚಿಸಿ, ಕಾಯ್ದೆಗಳಿಗೆ ತಿದ್ದುಪಡಿ ತರರಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಗಿದೆ.

ನಗರಾಭಿವೃದ್ಧಿ ಇಲಾಖೆ, ಬಿಬಿಎಂಪಿ, ಬೆಸ್ಕಾಂ, ಪೌರಾಡಳಿತ, ಇಂಧನ, ಪಂಚಾಯತ್‌ ರಾಜ್‌ ಆಯುಕ್ತಾಲಯದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.