ADVERTISEMENT

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕೊನೆಗೊಳಿಸಲು ಒತ್ತಡ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2019, 20:15 IST
Last Updated 18 ಆಗಸ್ಟ್ 2019, 20:15 IST
   

ಬೆಂಗಳೂರು: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಅರ್ಧದಲ್ಲೇ ಬಾಕಿಯಾಗಿದ್ದು, ಈಗಾಗಲೇ ಹೊರಡಿಸಿರುವ ಅಧಿಸೂಚನೆಯಂತೆ ಕೌನ್ಸೆಲಿಂಗ್‌ ಅನ್ನು ಈ ತಿಂಗಳೊಳಗೆ ಮುಗಿಸಬೇಕು ಎಂಬ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ಬರತೊಡಗಿದೆ.

‘ಹಲವು ಜಿಲ್ಲೆಗಳಲ್ಲಿ ನೆರೆ ಹಾವಳಿಯಿಂದಾಗಿ ಶಿಕ್ಷಕರಿಗೂ ತೊಂದರೆಯಾಗಿದೆ. ಶೇ20ಕ್ಕಿಂತ ಅಧಿಕ ಪ್ರಮಾಣದಲ್ಲಿ ಖಾಲಿ ಇರುವ ತಾಲ್ಲೂಕುಗಳಿಗೆ ಮಾತ್ರ ವರ್ಗಾವಣೆ ಎಂಬ ನಿಮಮ ಸಡಿಲಿಸಿದರೆ ಹಲವಾರು ಸಮಸ್ಯೆಗಳು ನಿವಾರಣೆಯಾಗುತ್ತವೆ. ಅದನ್ನು ಜಾರಿಗೆ ತಂದುಈಗಾಗಲೇ ನಡೆದಿರುವ ವರ್ಗಾವಣೆಯ ಪ್ರಕ್ರಿಯೆ ಮುಂದುವರಿಸಲು ಒತ್ತಾಯಿಸಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಮಾಡಲಿದ್ದೇವೆ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ.ನಾರಾಯಣಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ಕಾನೂನು ತಜ್ಞರ ಅಭಿಪ್ರಾಯ ಪಡೆದಿರುವ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಗೆ ಸಲಹೆ ನೀಡಲು ಸಜ್ಜಾಗಿದ್ದಾರೆ. ಆದರೆ ಇನ್ನೂ ಸಮಯ ಸಿಕ್ಕಿಲ್ಲ. ಸೋಮವಾರ ಇದಕ್ಕೆ ಅವಕಾಶ ಸಿಗುವ ಸಾಧ್ಯತೆ ಇದೆ. ಮಂಗಳವಾರ ಸಂಪುಟ ವಿಸ್ತರಣೆಯ ಬಳಿಕ ವರ್ಗಾವಣೆ ಪ್ರಕ್ರಿಯೆ ಮತ್ತೆ ಚಾಲನೆಗೊಳ್ಳುವ ಸಾಧ್ಯತೆ ಇದೆ’ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.