
ಜೈಲು (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ (ಡಿಜಿ ಮತ್ತು ಐಜಿಪಿ) ಓಂ ಪ್ರಕಾಶ್ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿ ಇರುವ ಆರೋಪಿ ಪಲ್ಲವಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಂಪಾಟ ನಡೆಸಿದ್ದಾರೆ.
ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಅವರನ್ನು ಬಂಧಿಸಿ ಒಂಬತ್ತು ತಿಂಗಳು ಕಳೆದಿದೆ. ಬಂಧನದ ವೇಳೆಯೂ ಪಲ್ಲವಿ ಅವರು ಗಲಾಟೆ ನಡೆಸಿದ್ದರು. ಈಗ ಜೈಲು ಸೇರಿದ ಮೇಲೂ ಗಲಾಟೆ ಮುಂದುವರಿಸಿದ್ದಾರೆ ಎಂದು ಗೊತ್ತಾಗಿದೆ.
‘ತನ್ನನ್ನು ಹೊರಗಡೆ ಬಿಡಿ’ ಎಂದು ಆಗಾಗ ಕೂಗಾಡುತ್ತಾರೆ. ಅವರ ನಿಯಂತ್ರಣವೇ ಮಹಿಳಾ ಸಿಬ್ಬಂದಿಗೆ ದೊಡ್ಡ ಸವಾಲಾಗಿದೆ. ವಿಚಿತ್ರ ವರ್ತನೆ ಹಿನ್ನೆಲೆಯಲ್ಲಿ ಬ್ಯಾರಕ್ ಬಳಿ ಹೆಚ್ಚಿನ ನಿಗಾ ಇಡಲಾಗಿದೆ. ಜೊತೆಗೆ ವೈದ್ಯರಿಂದ ಕೌನ್ಸೆಲಿಂಗ್ ನಡೆಸಲಾಗಿದೆ’ ಎಂದು ಜೈಲಿನ ಮೂಲಗಳು ಹೇಳಿವೆ.
ಓಂ ಪ್ರಕಾಶ್ (68) ಅವರನ್ನು ನಗರದ ಎಚ್ಎಸ್ಆರ್ ಲೇಔಟ್ ನಿವಾಸದಲ್ಲಿ ಹತ್ಯೆ ಮಾಡಲಾಗಿತ್ತು. 8ರಿಂದ10 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ತನಿಖೆ ಪೂರ್ಣಗೊಳಿಸಿದ್ದ ಸಿಸಿಬಿ ಪೊಲೀಸರು, ಆಗಸ್ಟ್ನಲ್ಲಿ ನ್ಯಾಯಾಲಯಕ್ಕೆ 1,150 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅವರ ಪತ್ನಿ ಪಲ್ಲವಿ ಪ್ರಕರಣದ ಪ್ರಮುಖ ಆರೋಪಿ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.