ಬೆಂಗಳೂರು: ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪದಡಿ ರೋಷನ್ ಷರೀಫ್ (26) ಎಂಬಾತನನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಮೈಸೂರು ರಸ್ತೆಯ ವಾಲ್ಮೀಕಿ ನಗರ ನಿವಾಸಿಯಾದ ರೋಷನ್, ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಆತನಿಂದ ₹ 4 ಲಕ್ಷ ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಸ್ಥಳೀಯ ಕೆಲ ಹುಡುಗರ ಜೊತೆ ಸೇರುತ್ತಿದ್ದ ಆರೋಪಿ, ಜೂಜು ಆಡುತ್ತಿದ್ದ. ಅದಕ್ಕಾಗಿ ಹಣ ಹೊಂದಿಸಲು ದ್ವಿಚಕ್ರ ಕಳವು ಮಾಡಲಾರಂಭಿಸಿದ್ದ.’
‘ಸಿದ್ದಯ್ಯ ರಸ್ತೆ, ವಿಲ್ಸನ್ ಗಾರ್ಡನ್, ಸುಧಾಮನಗರ, ಬಂಬೂ ಬಜಾರ್, ಸಿದ್ದಾಪುರ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣಗಳು ಹೆಚ್ಚಾಗಿದ್ದವು. ಆರೋಪಿಗಳ ಪತ್ತೆಗೆ ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ವಿಶೇಷ ತಂಡ ರಚಿಸಿದ್ದರು. ಅದೇ ತಂಡದ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ’ ಎಂದೂ ಪೊಲೀಸರು ತಿಳಿಸಿದರು.
‘ಕದ್ದ ದ್ವಿಚಕ್ರ ವಾಹನಗಳನ್ನು ಆರೋಪಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ. ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರಿಂದ, ಆತನಿಗೆ ಹಲವು ಗ್ರಾಹಕರ ಪರಿಚಯವಿತ್ತು. ವಾಹನ ಮಾರಾಟ ಮಾಡುತ್ತಿದ್ದ ವೇಳೆಯಲ್ಲಿ ನಮ್ಮ ಕೈಗೆ ಸಿಕ್ಕಿಬಿದ್ದ’ ಎಂದೂ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.