ಬೆಂಗಳೂರು: ‘ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮವು ಫಲಾನುಭವಿಗಳಿಂದ ಸಾಲ ಮರುಪಾವತಿಗೆ ಆನ್ ಲೈನ್ ವ್ಯವಸ್ಥೆ ಕಲ್ಪಿಸಿದೆ’ ಎಂದು ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್ ತಿಳಿಸಿದರು.
ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಿಗಮವು ಕಳೆದ ಎರಡು ವರ್ಷಗಳಲ್ಲಿ ₹15.50 ಕೋಟಿ ಅನುದಾನದಲ್ಲಿ 1,565 ಫಲಾನುಭವಿಗಳಿಗೆ ಸಾಲ ಸೌಲಭ್ಯ ಒದಗಿಸಿದೆ. ದೂರದ ಊರುಗಳಲ್ಲಿರುವ ಫಲಾನುಭವಿಗಳು ಸಾಲ ಮರುಪಾವತಿಗೆ ಜಿಲ್ಲಾ ಕಚೇರಿಗಳಿಗೆ ಪ್ರಯಾಣಿಸುವುದನ್ನು ತಪ್ಪಿಸಲು ಹಾಗೂ ಆರ್ಥಿಕ ವೆಚ್ಚದ ಹೊರೆ ತಗ್ಗಿಸುವ ಉದ್ದೇಶದಿಂದ ಡಿಜಿಟಲ್ ಪಾವತಿಗೆ ಅನುವು ಮಾಡಿಕೊಡಲಾಗಿದೆ’ ಎಂದರು.
‘ಸಾಲ ಮರುಪಾವತಿಗೆ ನಿಗಮದ ವತಿಯಿಂದ ಮೊಬೈಲ್ ಆ್ಯಪ್ ಕೂಡ ಅಭಿವೃದ್ಧಿ ಪಡಿಸಲಾಗಿದ್ದು, ಶೀಘ್ರದಲ್ಲೇ ಮುಖ್ಯಮಂತ್ರಿಗಳಿಂದ ಆ್ಯಪ್ ಗೆ ಚಾಲನೆ ಸಿಗಲಿದೆ’ ಎಂದು ಮಾಹಿತಿ ನೀಡಿದರು.
‘ನಿಗಮವು 2021-22ನೇ ಸಾಲಿನಲ್ಲಿ ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆಯಡಿ ಫುಡ್ ಟ್ರಕ್ ಸೌಲಭ್ಯ, ವಾಸವಿ ಜಲಶಕ್ತಿ ಯೋಜನೆಯಡಿ ಕೊಳವೆ ಬಾವಿ ಕೊರೆಸಲು ಸಾಲ, ಜ್ಞಾನ ಜ್ಯೋತಿ ಯೋಜನೆಯಡಿ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ ಹಾಗೂ ಕೊರೊನಾದಿಂದ ಮೃತಪಟ್ಟ ಫಲಾನುಭವಿಗಳ ಸಾಲ ಮನ್ನಾ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ’ ಎಂದೂ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.