ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಮಂಗಳವಾರ ಆನ್ಲೈನ್ ಚಳವಳಿ ನಡೆಸಿದರು.
ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ಸಹಯೋಗದಲ್ಲಿ ನಡೆದ ಚಳವಳಿಯಲ್ಲಿ ರಾಜ್ಯದಾದ್ಯಂತದ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರು ಭಾಗವಹಿಸಿದ್ದರು. ಇ-ಮೇಲ್ ಮುಖಾಂತರ ಜಿಲ್ಲಾಧಿಕಾರಿಗಳಿಗೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಅತಿಥಿ ಉಪನ್ಯಾಸಕರನ್ನು ಯಾವುದೇ ಕಾರಣಕ್ಕೂ ಸೇವೆಯಿಂದ ವಜಾ ಮಾಡಬಾರದು. ಜತೆಗೆ, ಸೇವಾ ಭದ್ರತೆ ಖಾತರಿಪಡಿಸಬೇಕು. ಸರ್ಕಾರದ ಎಲ್ಲ ನೇಮಕಾತಿಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಆದ್ಯತೆ ನೀಡಬೇಕು. ಗೌರವಧನವನ್ನು ಹೆಚ್ಚಿಸಬೇಕು ಹಾಗೂ ವರ್ಷದ 12 ತಿಂಗಳು ಸಂಬಳ ನೀಡಬೇಕು ಎಂದು ಒತ್ತಾಯಿಸಿದರು.
ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಆತ್ಮಹತ್ಯೆಗೆ ಶರಣಾದ ಅತಿಥಿ ಉಪನ್ಯಾಸಕರಿಗೆ ಪರಿಹಾರ ಘೋಷಿಸಬೇಕು. ಈಗಾಗಲೇ ಕಾರ್ಯನಿರ್ವಹಿಸಿರುವವರಿಗೆ ಸೇವಾ ಪ್ರಮಾಣ ಪತ್ರ ಹಾಗೂ ಗುರುತಿನ ಚೀಟಿ ನೀಡಬೇಕು. ಅತಿಥಿ ಉಪನ್ಯಾಸಕರಿಗೆ ಪಿಎಫ್ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.