ಬೆಂಗಳೂರು: ‘ರಸ್ತೆಯಲ್ಲಿ ಹೋಗುವ ಎಲ್ಲ ವಾಹನಗಳನ್ನು ತಡೆದು ತಪಾಸಣೆ ನಡೆಸುವುದು ಬೇಡ. ಯಾರಾದರೂ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದು ಕಂಡರೆ ಮಾತ್ರ ವಾಹನವನ್ನು ತಡೆದು ಮುಂದಿನ ಕ್ರಮ ಕೈಗೊಳ್ಳಿ’ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ಸಂಚಾರ ಪೊಲೀಸರಿಗೆ ಸೂಚನೆ ನೀಡಿದರು.
ಎರಡನೇ ಶನಿವಾರದ ಪ್ರಯುಕ್ತ ವೈಟ್ಫೀಲ್ಡ್ ಉಪವಿಭಾಗದಲ್ಲಿ ಹಮ್ಮಿಕೊಂಡಿದ್ದ ‘ಸಂಚಾರ ಸಂಪರ್ಕ ದಿನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಾರ್ವಜನಿಕರ ದೂರುಗಳನ್ನು ಆಲಿಸಿ ಅವರು ಮಾತನಾಡಿದರು.
ಟೋಯಿಂಗ್ ಸಿಬ್ಬಂದಿ ಕುರಿತ ದೂರಿಗೆ ಪ್ರತಿಕ್ರಿಯಿಸಿದ ಅವರು, ‘ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ. ನಿಷೇಧಿತ ಪ್ರದೇಶದಲ್ಲಿ ವಾಹನ ನಿಲ್ಲಿಸಿದ್ದಕ್ಕೆ ವಿಧೀಸು ದಂಡಕ್ಕಿಂತ ಹೆಚ್ಚಿನ ಮೊತ್ತವನ್ನು ಸಿಬ್ಬಂದಿ ಕೇಳಿದರೆ, ಕಿರುಕುಳ ನೀಡಿದರೆ ನನಗೆ ದೂರು ನೀಡಬಹುದು. ಆರೋಪ ಸಾಬೀತಾದರೆ ಟೋಯಿಂಗ್ ವಾಹನದ ಗುತ್ತಿಗೆಯನ್ನು ರದ್ದು ಮಾಡುತ್ತೇನೆ’ ಎಂದರು.
‘ಕೆಲವೆಡೆ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಲಾಗಿದೆ. ಇದು ಸಂಚಾರ ದಟ್ಟಣೆಗೆ ಕಾರಣವಾಗುತ್ತಿದೆ’ ಎಂದು ಸಾರ್ವಜನಿಕರು ದೂರಿದರು. ಆ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಕಮಲ್ ಪಂತ್ ಭರವಸೆ ನೀಡಿದರು.
ಕ್ರಿಮಿನಲ್ ಪ್ರಕರಣ ದಾಖಲು: ಡಿಸಿಪಿ ದೇವರಾಜ್ ಮಾತನಾಡಿ, ‘ಪಾದಚಾರಿ ಮಾರ್ಗ ಒತ್ತುವರಿ ಮಾಡಿದರೆ, ಕಟ್ಟಡದ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆದರೆ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.