
ಸಾಂದರ್ಭಿಕ ಚಿತ್ರ
ಬೆಂಗಳೂರು: ‘ಮುಖ್ಯವಾಹಿನಿಯ ಸಾಹಿತ್ಯ ಚರಿತ್ರೆಯಲ್ಲಿ ಮೂಕ ಸಮುದಾಯಗಳು ಹಾಗೂ ಶೋಷಿತರ ಧ್ವನಿಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕಾದ ಅಗತ್ಯವಿದೆ’ ಎಂದು ವಿಮರ್ಶಕ ಕೆ.ಜಿ.ನಾಗರಾಜಪ್ಪ ತಿಳಿಸಿದರು.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗ, ಅಭಿನವ ಮತ್ತು ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾನಿಲಯದ ಕನ್ನಡ ಭಾಷೆ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ‘ಆನು ಒಲಿದಂತೆ ಹಾಡುವೆ’ ಸರಣಿಯ ಕನ್ನಡ ಮನಸ್ಸಿನೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಕನ್ನಡ ಸಂಸ್ಕೃತಿ ಹಾಳಾಗುತ್ತಿದ್ದು, ಅದನ್ನು ಸರಿಪಡಿಸುವ ದಾರಿ ಯಾವುದು ಎನ್ನುವುದು ಸಮಕಾಲೀನ ಪ್ರಶ್ನೆಯಾಗಿದೆ. ಇದನ್ನು ಬಹುಸಂಸ್ಕೃತಿ ನೆಲೆಯಲ್ಲಿ ವಿಶ್ಲೇಷಿಸುವುದು ನಿಜವಾದ ಸಾಹಿತ್ಯ’ ಎಂದರು.
ಅಧ್ಯಕ್ಷತೆ ವಹಿಸಿದ್ದ ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದ ಕುಲಪತಿ ರೆವರೆಂಡ್ ವಿಕ್ಟರ್ ಲೋಬೊ ಮಾತನಾಡಿ, ‘ಕನ್ನಡ ಸಂಸ್ಕೃತಿ, ಸಾಹಿತ್ಯವನ್ನು ಬೆಳೆಸುವಲ್ಲಿ ನಮ್ಮ ವಿಶ್ವವಿದ್ಯಾಲಯ ಅನೇಕ ಯೋಜನೆಗಳನ್ನು ಹಾಕಿಕೊಂಡಿದ್ದು, ಅಧ್ಯಯನ ಕೇಂದ್ರ ಸ್ಥಾಪಿಸಿದೆ’ ಎಂದರು.
ಕನ್ನಡ ವಿಶ್ವವಿದ್ಯಾಲಯ ಕುಲಪತಿ ಡಿ.ವಿ.ಪರಮಶಿವಮೂರ್ತಿ, ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಮುಖ್ಯಸ್ಥ ವೆಂಕಟಗಿರಿ ದಳವಾಯಿ, ಅಭಿನವ ಪ್ರಕಾಶನದ ರವಿಕುಮಾರ್ ಮಾತನಾಡಿದರು. ಕೆ.ಜಿ.ನಾಗರಾಜಪ್ಪ ಅವರ ಬದುಕು ಸಾಧನೆಗಳ ಬಗೆಗೆ ಲೇಖಕ ಮಹೇಶ್ ಹರವೆ ಮತ್ತು ಕೃತಿಗಳ ಕುರಿತು ರುಕ್ಮಿಣಮ್ಮ ಮಾತನಾಡಿದರು.
ಕನ್ನಡ ಭಾಷೆ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರದ ಸಂಚಾಲಕ ಕುಮಾರಸ್ವಾಮಿ ಬೆಜ್ಜೆಹಳ್ಳಿ, ವಿದ್ವಾಂಸ ಸಿ.ವೀರಣ್ಣ, ಪತ್ರಕರ್ತೆ ಆರ್. ಪೂರ್ಣಿಮಾ, ಇತಿಹಾಸ ಅಕಾಡೆಮಿ ಕಾರ್ಯದರ್ಶಿ ಕೆ.ಎಲ್. ರಾಜಶೇಖರ, ಲೇಖಕಿ ಪಿ.ಚಂದ್ರಿಕಾ, ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸುಮಿತ್ರಾ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.