ADVERTISEMENT

ಬೆಂಗಳೂರು ಬಿಡಬೇಕಾದೀತು: ಸಿಎಂ ಬೊಮ್ಮಾಯಿಗೆ ಒಆರ್‌ಆರ್‌ಸಿಎ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2022, 19:40 IST
Last Updated 3 ಸೆಪ್ಟೆಂಬರ್ 2022, 19:40 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ‘ನಗರದಲ್ಲಿ ಮೂಲಸೌಕರ್ಯ ಸುಧಾರಣೆ ಆಗದಿದ್ದರೆ ಐ.ಟಿ ಕಂಪನಿಗಳನ್ನು ಮುಂದುವರಿಸಲು ಬೇರೆ ಸ್ಥಳಗಳನ್ನು ಹುಡುಕಿಕೊಳ್ಳಬೇಕಾಗುತ್ತದೆ’ ಎಂದು ಹೊರ ವರ್ತುಲ ರಸ್ತೆ ಕಂಪನಿಗಳ ಸಂಘ (ಒಆರ್‌ಆರ್‌ಸಿಎ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದೆ.

‘ಭಾರಿ ಮಳೆಯಿಂದಾಗಿ ಹೊರವರ್ತುಲ ರಸ್ತೆಗಳಲ್ಲಿನ ಕಂಪನಿಗಳಿಗೆ ಸುಮಾರು ₹200 ಕೋಟಿಗೂ ಹೆಚ್ಚು ನಷ್ಟವಾಗಿದೆ. ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುವಂತಾಗಿದೆ. ಇದರಿಂದ ಉತ್ಪಾದನಾ ಸಾಮರ್ಥ್ಯದ ಮೇಲೆ ಹೊಡೆತ ಬಿದ್ದಿದೆ’ ಎಂದು ಪತ್ರದಲ್ಲಿ ಹೇಳಿದೆ.

ಐ.ಟಿ ಕಂಪನಿಗಳಿಂದ ಸರ್ಕಾರಕ್ಕೆ ಬರುತ್ತಿರುವ ವರಮಾನದಲ್ಲಿ ಶೇ 32ರಷ್ಟು ಪಾಲು ಬೆಂಗಳೂರು ಐ.ಟಿ ಕಂಪನಿಗಳದ್ದೇ ಆಗಿದೆ. ಸಂಚಾರ ದಟ್ಟಣೆ ಸಮಸ್ಯೆ ಹಲವು ವರ್ಷಗಳಿಂದ ಕಂಪನಿಗಳನ್ನು ಕಾಡುತ್ತಿದೆ. ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.

ADVERTISEMENT

ಹೊರ ವರ್ತುಲ ರಸ್ತೆಯಲ್ಲಿ ಮಳೆ ನೀರು ಮೂರು ದಿನ ಹರಿದು ಸಂಚಾರ ದಟ್ಟಣೆ ಸೃಷ್ಟಿಸಿದ ಸಂದರ್ಭದಲ್ಲಿ ‘ಮಳೆಯಿಂದ ಹಾನಿಗೊಳಗಾಗಿರುವ ಬೆಂಗಳೂರನ್ನು ಕಾಪಾಡಿ’ ಎಂದು ಪ್ರಧಾನಿ ಅವರಿಗೆ ಟ್ಯಾಗ್ ಮಾಡಿ ಉದ್ಯಮಿ ಟಿ.ವಿ. ಮೋಹನದಾಸ್ ಪೈ ಟ್ವೀಟ್ ಮಾಡಿದ್ದರು. ಅದರ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದೀಗ ಒಆರ್‌ಆರ್‌ಸಿಎ ಮುಖ್ಯಮಂತ್ರಿಗೆ ಪತ್ರ ಬರೆದು ಅದನ್ನು ಟ್ವೀಟ್ ಮಾಡಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.