ಬೆಂಗಳೂರು:ಖಾಸಗಿ ಶಾಲೆಗಳ ಹಾವಳಿ ಮತ್ತು ಮೂಲಸೌಕರ್ಯದ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಹಲವು ಸರ್ಕಾರಿ ಶಾಲೆಗಳುಬಾಗಿಲು ಮುಚ್ಚುವ ಸ್ಥಿತಿ ತಲುಪಿವೆ. ಇಂತಹ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ಒದಗಿಸುವ ಸಂಕಲ್ಪ ಕೈಗೊಂಡಿರುವ‘ಒಸಾಟ್’ ಸಂಸ್ಥೆಯು ಈಗಾಗಲೇ 35 ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಿದೆ.
ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿರುವ ಅನಿವಾಸಿ ಭಾರತೀಯ ಸಮಾನ ಮನಸ್ಕರು ಸೇರಿ ಹುಟ್ಟು ಹಾಕಿರುವ ಲಾಭರಹಿತ ಸ್ವಯಂಸೇವಾ ಸಂಸ್ಥೆಯೇ ‘ಒಸಾಟ್’.ಶಿಥಿಲಾವಸ್ಥೆಯ ಕಟ್ಟಡಗಳಲ್ಲಿ ನಡೆಯುತ್ತಿರುವ ಶಾಲೆಗಳನ್ನು ಆಯ್ಕೆ ಮಾಡಿಕೊಂಡು, ಸುಸಜ್ಜಿತ ಮೂಲಸೌಕರ್ಯ ಕಲ್ಪಿಸುವ ಕಾರ್ಯ ಸದ್ದಿಲ್ಲದೆ ಮಾಡುತ್ತಿದೆ. ಕರ್ನಾಟಕ, ಉತ್ತರ ಪ್ರದೇಶ, ಮಣಿಪುರ, ಮಹಾರಾಷ್ಟ್ರ ಮತ್ತು ತಮಿಳುನಾಡಿನ ವಿವಿಧ ಶಾಲೆಗಳನ್ನು ಆಯ್ಕೆ ಮಾಡಿಕೊಂಡಿದೆ.
ಸಂಸ್ಥೆಯುನಗರದಲ್ಲಿ ಭಾನುವಾರ ಆಯೋಜಿಸಿದ್ದ ‘ಸಾಧನೆ’ ಕಾರ್ಯಕ್ರಮಕ್ಕೆ ಹಿರಿಯ ಕ್ರಿಕೆಟಿಗ ಅನಿಲ್ ಕುಂಬ್ಳೆ ಚಾಲನೆ ನೀಡಿ, ಶುಭ ಹಾರೈಸಿದರು.2019ರಲ್ಲಿ 9 ಶಾಲೆಗಳಿಗೆ ಕಾಯಕಲ್ಪ ಒದಗಿಸಲಾಗಿದ್ದು, ಈ ಕಾರ್ಯಕ್ಕೆ ₹ 5 ಕೋಟಿ ವೆಚ್ಚ ಮಾಡಲಾಗಿದೆ. ಇದರಲ್ಲಿ ಮೈಸೂರು, ಚಾಮರಾಜನಗರ, ರಾಯಚೂರು, ಹಾವೇರಿ ಜಿಲ್ಲೆಯ 5 ಶಾಲೆಗಳು ಸೇರಿವೆ.
ಶಾಲೆಗಳ ಆಯ್ಕೆ: ‘ಗ್ರಾಮೀಣ ಪ್ರದೇಶದಲ್ಲಿ ನಾಲ್ಕೈದು ದಶಕಗಳು ಅಥವಾ ಅದಕ್ಕೂ ಹಳೆಯ ಶಾಲೆಗಳು ಕಾಣಸಿಗುತ್ತವೆ. ಕೆಲವು ಶಾಲೆಗಳ ಕಟ್ಟಡಗಳು ಶಿಥಿಲಾವಸ್ಥೆ ತಲುಪಿವೆ. ಆದ್ದರಿಂದ ಅಂತಹ ಶಾಲೆಗಳನ್ನು ಗುರುತಿಸಿ, ಅವುಗಳಿಗೆ ಹೊಸ ಸ್ಪರ್ಶನೀಡುವ ಕೆಲಸ ಮಾಡುತ್ತಿದ್ದೇವೆ’ ಎಂದು ಸಂಸ್ಥೆ ಅಧ್ಯಕ್ಷ ಬಿ.ವಿ.ಜಗದೀಶ್ ತಿಳಿಸಿದರು.
ಸಂಸ್ಥೆ ಕಾರ್ಯದರ್ಶಿ ಪದ್ಮನಾಭರಾವ್ ಮಾತನಾಡಿ, ಉತ್ತರ ಕರ್ನಾಟಕದ ಭಾಗದ 14 ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.