ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯ ಮಟ್ಟದ ತಜ್ಞರ ಸಮಿತಿಯ ಮಾದರಿಯಲ್ಲೇ ಎಲ್ಲ ಜಿಲ್ಲೆಗಳಲ್ಲೂ ತಜ್ಞರ ಸಮಿತಿ ನೇಮಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ಆರೋಗ್ಯ ಸೌಧದಲ್ಲಿ ಶನಿವಾರ ಹಿರಿಯ ಅಧಿಕಾರಿಗಳು ಮತ್ತು ತಜ್ಞರ ಸಮಿತಿ ಸದಸ್ಯರ ಜತೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ‘ಕೋವಿಡ್ 3ನೇ ಅಲೆ ನಿಯಂತ್ರಿ ಸಲು ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಬೇಕಿದೆ. ಇದಕ್ಕಾಗಿ ಜಿಲ್ಲಾ ಮಟ್ಟದ ತಜ್ಞರ ಸಮಿತಿ ನೇಮಿಸಲಾಗುವುದು. ಈ ಸಮಿತಿಗಳು ಜಿಲ್ಲಾಡಳಿತಕ್ಕೆ ಸಲಹೆ ನೀಡಲಿವೆ’ ಎಂದರು.
ರಾಜ್ಯದಲ್ಲೂ ಡೆಲ್ಟಾ ತಳಿಯ ಕೊರೊನಾ ವೈರಾಣು ವೇಗವಾಗಿ ಹರಡುತ್ತಿದೆ. ಈ ಕಾರಣದಿಂದ ಡಿಸೆಂಬರ್ ಅಂತ್ಯದವರೆಗೂ ಪ್ರತಿ ದಿನ ಒಂದೂವರೆ ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.
7 ಲಕ್ಷ ಡೋಸ್ ಗುರಿ: ಸೋಮವಾರದಿಂದ ರಾಜ್ಯದಾ ದ್ಯಂತ ಕೋವಿಡ್ ಲಸಿಕಾ ಮೇಳ ಆರಂಭವಾಗಲಿದೆ. ಮೊದಲ ದಿನವೇ 7 ಲಕ್ಷ ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದರು.
ಈಗ ರಾಜ್ಯದಲ್ಲಿ 14 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ದಾಸ್ತಾನು ಇದೆ. 18ರಿಂದ 44 ವರ್ಷ ವಯಸ್ಸಿನವರು, 44 ವರ್ಷಕ್ಕಿಂತ ಮೇಲಿನವರು ಹಾಗೂ ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗುವುದು ಎಂದರು.
ಮನೆಯಲ್ಲೇ ಯೋಗ ದಿನ: ಸೋಮವಾರ ವಿಶ್ವದಾದ್ಯಂತ ಯೋಗ ದಿನಾಚರಣೆ ನಡೆಯಲಿದೆ. ಅಂದು ಮುಖ್ಯಮಂತ್ರಿ ಅವರು ಮನೆಯಲ್ಲೇ ಯೋಗ ದಿನ ಆಚರಿಸಲಿದ್ದಾರೆ. ನಾನು ಕೂಡ ಪಾಲ್ಗೊಳ್ಳುವೆ. ಎಲ್ಲರೂ ತಮ್ಮ ಮನೆಗಳಲ್ಲೇ ಯೋಗಾಭ್ಯಾಸ ಮಾಡಿ, ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ಹಂಚಿಕೊಳ್ಳಬೇಕು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.