ಬೆಂಗಳೂರು: ಕಳೆದ ವರ್ಷ ನಡೆದ ಜಮಖಂಡಿ ವಿಧಾನಸಭೆ ಉಪ ಚುನಾವಣೆ ವೇಳೆ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಜಿ. ಪರಮೇಶ್ವರ್ ವಿರುದ್ಧ ದಾಖಲಾಗಿದ್ದ ಪ್ರಕರಣ ಮತ್ತು ಅಧೀನ ನ್ಯಾಯಾಲಯದ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಈ ಕುರಿತಂತೆ ಪರಮೇಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
‘ಮ್ಯಾಜಿಸ್ಟ್ರೇಟ್ ಪೂರ್ವಾನು ಮತಿ ಇಲ್ಲದೆ ಎಫ್ಐಆರ್ ದಾಖಲಿಸುವ ಅಥವಾ ತನಿಖೆ ನಡೆಸುವ ಅಧಿಕಾರ ಪೊಲೀಸರಿಗಿಲ್ಲ’ ಎಂಬ ಕಾರಣ ನೀಡಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸಿದೆ.
ಪರಮೇಶ್ವರ್ ಅವರು, 2018ರ ಅಕ್ಟೋಬರ್ 23ರಂದು ಜಮಖಂಡಿ ವಿಧಾನಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಸಿದ್ದು ನ್ಯಾಮಗೌಡ ಪರ ಪ್ರಚಾರ ಭಾಷಣ ಮಾಡಿದ್ದರು. ‘ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಜಂಬಗಿ-ಸಾವಳಗಿ ರಸ್ತೆಯನ್ನು ಮೂರು ತಿಂಗಳಿನಲ್ಲಿ ಡಾಂಬರೀಕರಣ ಮಾಡಲಾಗುವುದು’ ಎಂದು ಆಶ್ವಾಸನೆ ನೀಡಿದ್ದರು.
‘ಈ ಆಶ್ವಾಸನೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ’ ಎಂದು ಆರೋಪಿಸಿ ಅಕ್ಟೋಬರ್ 24ರಂದು ಸಾವಳಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.