
ಬೆಂಗಳೂರು: ‘ಸಜಾ ಬಂದಿಗಳು ಪೆರೋಲ್ ಪಡೆಯಲು ಅನುಕೂಲವಾಗುವಂತೆ ಸುಳ್ಳು ವೈದ್ಯಕೀಯ ದಾಖಲೆ ನೀಡುತ್ತಿರುವ ವೈದ್ಯರ ವಿರುದ್ಧ ಸರ್ಕಾರ ಗಂಭೀರವಾಗಿ ಗಮನ ಹರಿಸಬೇಕಿದೆ’ ಎಂದು ಹೈಕೋರ್ಟ್ ಮೌಖಿಕವಾಗಿ ಎಚ್ಚರಿಸಿದೆ.
‘ಅನಾರೋಗ್ಯದಿಂದ ಬಳಲುತ್ತಿರುವ ನನ್ನ ತಾಯಿಯ ಚಿಕಿತ್ಸೆಗೆ ಆಸರೆಯಾಗಲು ಪೆರೋಲ್ ನೀಡಬೇಕು’ ಎಂದು ಕೋರಿ ಅಪರಾಧ ಪ್ರಕರಣವೊಂದರಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಸಜಾಬಂದಿಯೊಬ್ಬರು ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ‘ಹಲವು ಪ್ರಕರಣಗಳಲ್ಲಿ ಪೆರೋಲ್ ಕೋರುವ ಸಜಾ ಬಂದಿಗಳು, ತಮ್ಮ ಅರ್ಜಿಯೊಂದಿಗೆ ಸಲ್ಲಿಸಿದ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಿದಾಗ ಅವೆಲ್ಲಾ ಏಕರೂಪದ ವೈದ್ಯಕೀಯ ದಾಖಲೆಗಳಾಗಿವೆ ಎಂಬ ಸಂಗತಿ ಬೆಳಕಿಗೆ ಬಂದಿದೆ’ ಎಂದು ನ್ಯಾಯಪೀಠಕ್ಕೆ ಅರುಹಿದರು.
ಈ ಹೇಳಿಕೆಗೆ ಅಚ್ಚರಿ ವ್ಯಕ್ತಪಡಿಸಿದ ನ್ಯಾಯಪೀಠ, ‘ಇದು ನಿಜಕ್ಕೂ ಆಘಾತಕಾರಿ. ಇಂತಹ ಬೆಳವಣಿಗೆಗಳ ಮೇಲೆ ರಾಜ್ಯ ಸರ್ಕಾರ ಕಣ್ಣಿಡಬೇಕು. ಸುಳ್ಳು ವೈದ್ಯಕೀಯ ದಾಖಲೆಗಳನ್ನು ವಿತರಿಸುವ ವೈದ್ಯರ ಬಗ್ಗೆ ಎಚ್ಚರ ವಹಿಸಬೇಕು. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಮೌಖಿಕವಾಗಿ ಎಚ್ಚರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.