ಬೆಂಗಳೂರು: ಪಟ್ಟಲಮ್ಮ ದೇವಿಯ ಜಾತ್ರೆ, ಊರ ಹಬ್ಬದ ಅಂಗವಾಗಿ ಜಯನಗರ ಕಮ್ಯೂನಿಟಿ ಸೆಂಟರ್ ವಿದ್ಯಾಸಂಸ್ಥೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಶಾಸಕ ಉದಯ್ ಬಿ. ಗರುಡಾಚಾರ್ ನೇತೃತ್ವದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ, ಬೆಂಗಳೂರು ಜಲಮಂಡಳಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಪಟ್ಟಲಮ್ಮ ದೇವಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ಎಂ. ನಾಗರಾಜ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಆರ್. ಅಶೋಕ ಮಾತನಾಡಿ, ‘ನೂರಾರು ವರ್ಷಗಳಿಂದ ಕನಕನಪಾಳ್ಯ, ಸಿದ್ಧಾಪುರ,ಬೈರಸಂದ್ರ, ನಾಗಸಂದ್ರ, ಯಡಿಯೂರು ಗ್ರಾಮಗಳು ಹಾಗೂ ಬಿಬಿಎಂಪಿ ವ್ಯಾಪ್ತಿಯ ನಾಗರೀಕರು ಶಕ್ತಿದೇವತೆ ಪಟ್ಟಲಮ್ಮ ದೇವಿ ಮಹೋತ್ಸವ ಆಚರಿಸಿಕೊಂಡು ಬರುತ್ತಿದ್ದಾರೆ. ಮೇ 5ರಿಂದ 7ರವರೆಗೆ ನಡೆಯುವ ದೇವಿಯ ಮಹೋತ್ಸವಕ್ಕೆ ಯಾವುದೇ ರೀತಿಯ ಅಡಚಣೆಗಳು ಆಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ವಿದ್ಯುತ್, ರಸ್ತೆ, ಚರಂಡಿ ಸ್ವಚ್ಛತೆ, ಕುಡಿಯುವ ನೀರಿನ ಸೌಲಭ್ಯ ಮೂರು ದಿನಗಳವರೆಗೆ ಪೂರೈಕೆ ಮಾಡಬೇಕು’ ಎಂದು ಸಲಹೆ ನೀಡಿದರು.
ರಾಮಲಿಂಗಾರೆಡ್ಡಿ ಮಾತನಾಡಿ, ‘ಪಟ್ಟಲಮ್ಮ ದೇವಿಯ ಉತ್ಸವದ ಸಂದರ್ಭದಲ್ಲಿ ಪೊಲೀಸ್ ಭದ್ರತೆ, ಆರತಿ ಹೊತ್ತು ಬರುವ ಸಾವಿರಾರು ಹೆಣ್ಣುಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ತುರ್ತು ಚಿಕಿತ್ಸೆಗೆ ಆಂಬುಲೆನ್ಸ್ ಸೇವೆ, ಅಲ್ಲಲ್ಲಿ ಸಂಚಾರಿ ಶೌಚಾಲಯಗಳನ್ನು ತೆರೆಯಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.