ADVERTISEMENT

‘ಐಎಲ್‌ಐ’ ರೋಗಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ: ಡಾ. ತ್ರಿಲೋಕ್ ಚಂದ್ರ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2021, 20:21 IST
Last Updated 20 ಡಿಸೆಂಬರ್ 2021, 20:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆ (ಸಾರಿ) ಮತ್ತು ಶೀತಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ (ಐಎಲ್‌ಐ) ಎದುರಿಸುತ್ತಿರುವ ರೋಗಿಗಳಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಬೇಕು ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಡಾ. ತ್ರಿಲೋಕ್ ಚಂದ್ರ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಿದ್ದಾರೆ.

ಕೋವಿಡ್ ಸೋಂಕು ನಿಯಂತ್ರಿಸುವ ಸಂಬಂಧ ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಮ್‌ಗಳ ಅಸೋಸಿಯೇಷನ್ (ಫಾನಾ) ಪದಾಧಿಕಾರಿಗಳು ಮತ್ತು 100ಕ್ಕೂ ಹೆಚ್ಚು ಆಸ್ಪತ್ರೆಗಳ ವ್ಯವಸ್ಥಾಪಕರ ಜತೆ ಸೋಮವಾರನಡೆಸಿದ ಸಭೆಯಲ್ಲಿ ಈ ಸೂಚನೆ ನೀಡಿದರು.

ಖಾಸಗಿ ಆಸ್ಪತ್ರೆಗಳ ಹೊರ ರೋಗಿ ವಿಭಾಗಕ್ಕೆ (ಒಪಿಡಿ) ತಪಾಸಣೆಗೆ ಬರುವ ‘ಐಎಲ್‌ಐ’ ಮತ್ತು ‘ಸಾರಿ’ ರೋಗಿಗಳಿಗೆ ಪರೀಕ್ಷೆಯನ್ನು ಕಡ್ಡಾಯವಾಗಿ ಕೈಗೊಳ್ಳಬೇಕು ಎಂದು ತಿಳಿಸಿದರು.

ADVERTISEMENT

ನಗರದಲ್ಲಿ ಕೋವಿಡ್ ಸೋಂಕು ಹರಡಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಆಸ್ಪತ್ರೆಗೆ ಬರುವ ಎಲ್ಲರೂ ಲಸಿಕೆ ಪಡೆದಿರುವುದನ್ನು ಖಾತರಿಪಡಿಸಿಕೊಳ್ಳಬೇಕು ಎಂದು ಹೇಳಿದರು.

ನಗರದಲ್ಲಿ ಸದ್ಯ ಕೋವಿಡ್ ಪ್ರಕರಣಗಳು ನಿಯಂತ್ರಣದಲ್ಲಿವೆ. ಸರ್ಕಾರದ ಹಿಂದಿನ ಅದೇಶದಂತೆ ಮುಂಜಾಗ್ರತಾ ಕ್ರಮವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಲುವಾಗಿಹಾಸಿಗೆಗಳನ್ನು ಮೀಸಲಿಡಲು ಸಿದ್ಧರಾಗಿರಬೇಕು. ಅಲ್ಲದೆ ಮಕ್ಕಳ ಚಿಕಿತ್ಸೆಗಾಗಿಯೂ ಪ್ರತ್ಯೇಕ ಹಾಸಿಗೆ ವ್ಯವಸ್ಥೆ ಮಾಡಿಕೊಂಡಿರಬೇಕು ಎಂದು ತಿಳಿಸಿದರು.

ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.