ಬೆಂಗಳೂರು: ‘ಲಾಕ್ಡೌನ್ನಿಂದ ಸಣ್ಣ ಕೈಗಾರಿಕೆಗಳಿಗೆ ವಿನಾಯಿತಿ ನೀಡಬೇಕು. ಇಲ್ಲವಾದಲ್ಲಿ ದುಡಿಯುವ ಕೈಗಳಿಗೆ ಕೆಲಸ ಕೊಡುವ ಈ ಕೈಗಾರಿಕೆಗಳು ಶಾಶ್ವತವಾಗಿ ನಶಿಸಿ ಹೋಗಲಿವೆ’ ಎಂದು ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಸಿ.ಪ್ರಕಾಶ್ ಆತಂಕ ವ್ಯಕ್ತಪಡಿಸಿದರು.
ಎಂಐಎ ಮತ್ತು ಲೇಬರ್ ನೆಟ್ ಸಹಯೋಗದಲ್ಲಿ ಪೀಣ್ಯ ಕೈಗಾರಿಕಾ ಸಂಘ ಆಯೋಜಿಸಿದ್ದ ಲಸಿಕಾ ಅಭಿಯಾನದಲ್ಲಿ ಮಾತನಾಡಿದ ಅವರು, ‘ಐದು ದಿನಗಳಲ್ಲಿ 6 ಸಾವಿರ ಜನರಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದೆ’ ಎಂದರು.
‘ಜೀವ ಮತ್ತು ಜೀವನ ಎರಡೂ ಮುಖ್ಯ. ರಫ್ತು ಚಟುವಟಿಕೆಗಳಿಗೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಆದರೆ, ಶೇ 90 ಉತ್ಪನ್ನಗಳನ್ನು ಸಣ್ಣ ಕೈಗಾರಿಕೆಗಳೇ ಉತ್ಪಾದಿಸಲಿವೆ. ಲಾಕ್ಡೌನ್ ಇರುವುದರಿಂದ ಉತ್ಪಾದನಾ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡಿದೆ. ಹೀಗಿರುವಾಗ ರಫ್ತು ವಲಯದಲ್ಲೂ ಯಾವುದೇ ಕೆಲಸ ಆಗುತ್ತಿಲ್ಲ. ಸರ್ಕಾರ ತಕ್ಷಣವೇ ಸಣ್ಣ ಕೈಗಾರಿಕೆಗಳ ಆರಂಭಕ್ಕೆ ಅವಕಾಶ ಮಾಡಿಕೊಡಬೇಕು. ಈ ಸಂಬಂಧ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರಿಗೆ ಮನವಿ ನೀಡಲಾಗಿದೆ’ ಎಂದರು.
‘ಕೊರೋನಾ ಸೋಂಕು ಹೆಚ್ಚಾಗಿದ್ದ ಕಾರಣ ವೈದ್ಯಕೀಯ ಕ್ಷೇತ್ರಕ್ಕೆ ಆಮ್ಲಜನಕ ಪೂರೈಕೆಗೆ ನಾವು ಸಹಕಾರ ನೀಡಿದ್ದೇವು. ಈಗ ಕೈಗಾರಿಕೆಗಳ ಪಾಲಿನ ಶೇ 50ರಷ್ಟು ಆಮ್ಲಜನಕ ಬಳಕೆಗೆ ಸರ್ಕಾರ ತಕ್ಷಣವೇ ಅನುಮತಿ ನೀಡಬೇಕು’ ಎಂದು ಪ್ರಕಾಶ್ ಮನವಿ ಮಾಡಿದರು.
ಪೀಣ್ಯ ಕೈಗಾರಿಕಾ ಸಂಘದ ಹಿರಿಯ ಉಪಾಧ್ಯಕ್ಷ ಆರಿಫ್, ಎಚ್.ಎಂ. ಶ್ಯಾಮ್ ಚಂದ್ರನ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.