ADVERTISEMENT

ದುರುಪಯೋಗಕ್ಕೆ ಅವಕಾಶವಿಲ್ಲದಂತೆ ಪೌರಕಾರ್ಮಿಕರ ಕಾಯಂ

ಅಂಬೇಡ್ಕರ್‌ ಜಯಂತಿ, ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಬಿಬಿಎಂಪಿ ಆಡಳಿತಗಾರ ಎಸ್‌.ಆರ್‌. ಉಮಾಶಂಕರ್‌

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2025, 16:20 IST
Last Updated 17 ಏಪ್ರಿಲ್ 2025, 16:20 IST
ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿಯಲ್ಲಿ ಉತ್ತಮ ಅಂಕ ಗಳಿಸಿದ ಪೌರಕಾರ್ಮಿಕರ ಮಕ್ಕಳನ್ನು ಗುರುವಾರ ನಡೆದ ಡಾ.ಬಿ.ಆರ್. ಅಂಬೇಡ್ಕರ್‌ ಜಯಂತಿ ಹಾಗೂ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಸನ್ಮಾನಿಸಲಾಯಿತು
ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿಯಲ್ಲಿ ಉತ್ತಮ ಅಂಕ ಗಳಿಸಿದ ಪೌರಕಾರ್ಮಿಕರ ಮಕ್ಕಳನ್ನು ಗುರುವಾರ ನಡೆದ ಡಾ.ಬಿ.ಆರ್. ಅಂಬೇಡ್ಕರ್‌ ಜಯಂತಿ ಹಾಗೂ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಸನ್ಮಾನಿಸಲಾಯಿತು   

ಬೆಂಗಳೂರು: ನೇರ ವೇತನ ಪೌರಕಾರ್ಮಿಕರಲ್ಲಿ 2,692 ಮಂದಿಯ ಸೇವೆಯನ್ನು ಕಾಯಂ ಮಾಡುವ ಪ್ರಕ್ರಿಯೆಯನ್ನು ದೂರು, ಮೋಸ, ದುರುಪಯೋಗಗಳಿಲ್ಲದಂತೆ ನಡೆಸಲಾಗಿದೆ. ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಮೇ 1ರಂದು ಆದೇಶ ಪತ್ರ ವಿತರಿಸಲಾಗುವುದು ಎಂದು ಬಿಬಿಎಂಪಿ ಆಡಳಿತಾಧಿಕಾರಿ ಎಸ್‌.ಆರ್‌. ಉಮಾಶಂಕರ್‌ ತಿಳಿಸಿದರು.

ಬಿಬಿಎಂಪಿ ಗುರುವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್‌ ಜಯಂತಿ ಹಾಗೂ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

30 ವರ್ಷಗಳ ಬಳಿಕ ದೊಡ್ಡ ಪ್ರಮಾಣದಲ್ಲಿ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸುವ ಪ್ರಕ್ರಿಯೆ ನಡೆಸಲಾಗುತ್ತಿದೆ. ಈ ಪೌರಕಾರ್ಮಿಕರು ಮುಂದಿನ ದಿನಗಳಲ್ಲಿ ನೆಮ್ಮದಿಯ ಜೀವನ ಸಾಗಿಸಲು ಅನುಕೂಲವಾಗುತ್ತದೆ ಎಂದು ಹೇಳಿದರು.

ADVERTISEMENT

ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ‘ಸಮಾಜದಲ್ಲಿ ಎಲ್ಲಿಯವರೆಗೆ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಸಂಘರ್ಷ ಇರುತ್ತದೆ’ ಎಂದು ಪ್ರತಿಪಾದಿಸಿದರು.

ಅಂಬೇಡ್ಕರ್ ಕುರಿತ ಪುಸ್ತಕಗಳನ್ನು ಓದಿ, ಅರಿತುಕೊಳ್ಳಬೇಕು. ಅವರ ವ್ಯಕ್ತಿತ್ವವನ್ನು ಎಲ್ಲರಿಗೂ ಪರಿಚಯಿಸಬೇಕು ಎಂದು ಸಲಹೆ ನೀಡಿದರು.

ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿಯಲ್ಲಿ ಉತ್ತಮ ಅಂಕ ಗಳಿಸಿದ ಪೌರಕಾರ್ಮಿಕರ 46 ಮಕ್ಕಳನ್ನು ಸನ್ಮಾನಿಸಿ ‘ಬಿ.ಆರ್ ಅಂಬೇಡ್ಕರ್ ಅವರ ವಿಚಾರಗಳು’ ಪುಸ್ತಕ ವಿತರಿಸಲಾಯಿತು. ಪಾಲಿಕೆಯ ಎಂಟು ವಲಯಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 17 ಪೌರಕಾರ್ಮಿಕರನ್ನು ಗೌರವಿಸಲಾಯಿತು.

ಅಂಬೇಡ್ಕರ್ ಜಯಂತಿ ಪ್ರಯುಕ್ತ ಕಾಯಂ ಪೌರಕಾರ್ಮಿಕರಿಗೆ ₹ 22,000 ಹಾಗೂ ನೇರ ವೇತನ ಪೌರಕಾರ್ಮಿಕರಿಗೆ ₹ 8,000 ಬೋನಸ್ ನೀಡಲಾಯಿತು.

ವಿಶೇಷ ಆಯುಕ್ತರಾದ ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹಲೋತ್‌, ವಲಯ ಆಯುಕ್ತರಾದ ಸತೀಶ್, ಕರೀಗೌಡ, ಉಪ ಆಯುಕ್ತ ಮಂಜುನಾಥ ಸ್ವಾಮಿ, ಪೌರಕಾರ್ಮಿಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.