ಪ್ರಾತಿನಿಧಿಕ ಚಿತ್ರ
– ಪ್ರಜಾವಾಣಿ ಚಿತ್ರ
ಬೆಂಗಳೂರು: ಕೊತ್ತನೂರಿನ ನಿವಾಸಿ ರಾಮಸ್ವಾಮಿ ಅವರು ಶನಿವಾರ (ಸೆಪ್ಟೆಂಬರ್ 14) ಮೃತಪಟ್ಟಿದ್ದು, ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಯುಡಿಆರ್ (ಅಸಹಜ ಸಾವು) ಪ್ರಕರಣ ದಾಖಲಾಗಿದೆ.
‘ಪೊಲೀಸರ ಹಲ್ಲೆಯಿಂದ ರಾಮಸ್ವಾಮಿ ಮೃತಪಟ್ಟಿದ್ದಾರೆ’ ಎಂದು ಅವರ ಪತ್ನಿ ಮುನಿಯಮ್ಮ ಆರೋಪಿಸಿದ್ದಾರೆ. ನ್ಯಾಯ ಕಲ್ಪಿಸುವಂತೆ ಆಗ್ರಹಿಸಿ, ಸಂಬಂಧಿಕರು ಮೃತದೇಹವಿಟ್ಟು ಪ್ರತಿಭಟನೆ ನಡೆಸಿದ್ದಾರೆ.
‘ಜುಲೈ 17ರಂದು ಸರ್ಕಾರಿ ಕಾಮಗಾರಿಗೆ ಅಡ್ಡಿಪಡಿಸುತ್ತಿರುವ ಸಂಬಂಧ ನಿರ್ಮಿತಿ ಕೇಂದ್ರದ ಎಂಜಿನಿಯರ್ ಒಬ್ಬರು ದೂರು ನೀಡಿದ್ದರು. ಆ ದೂರು ಆಧರಿಸಿ ರಾಮಸ್ವಾಮಿ ಕುಟುಂಬಸ್ಥರ ವಿರುದ್ಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿತ್ತು. ರಾಮಸ್ವಾಮಿ ಅವರನ್ನು ಬಂಧಿಸಿ, ವೈದ್ಯಕೀಯ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಅಂದು ಅವರು ಸಕ್ಕರೆ ಕಾಯಿಲೆ ಹಾಗೂ ಅಧಿಕ ರಕ್ತದ ಒತ್ತಡಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಪಡೆದುಕೊಂಡಿದ್ದರು. ನಂತರ, ಅವರನ್ನು ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗಿತ್ತು. ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗಿ ರಾಮಸ್ವಾಮಿ ಬಿಡುಗಡೆಗೊಂಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.
‘ಎರಡು ದಿನಗಳ ಹಿಂದೆ ಆ ವ್ಯಕ್ತಿ ಮೃತಪಟ್ಟಿದ್ದು, ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವಿಡಿಯೊ ಚಿತ್ರೀಕರಿಸಲಾಗಿದೆ. ವೈದ್ಯಕೀಯ ವರದಿ ಬಂದ ಬಳಿಕ ಸಾವಿಗೆ ಕಾರಣ ಗೊತ್ತಾಗಲಿದೆ’ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.