ಬೆಂಗಳೂರು: 2020ರ ಬಿಬಿಎಂಪಿ ಕಾಯ್ದೆ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಹೊಸ ಕಾಯ್ದೆ ಅಸಂವಿಧಾನಿಕ ಮತ್ತು ಕರ್ನಾಟಕ ಮುನ್ಸಿಪಲ್ ಕಾಯ್ದೆಗೆ (ಕೆಎಂಸಿ) ವಿರುದ್ಧವಾಗಿದೆ ಎಂದು ಆರೋಪಿಸಲಾಗಿದೆ.
ಸಾಮಾಜಿಕ ಕಾರ್ಯಕರ್ತ ಎಲ್.ಎಸ್. ಮಲ್ಲಿಕಾರ್ಜುನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಸರ್ಕಾರಕ್ಕೆ ನೋಟಿಸ್ ನೀಡಲು ಆದೇಶಿಸಿದೆ.
‘ಸಂವಿಧಾನದ 243 ಕ್ಯೂ ವಿಧಿಯ ಪ್ರಕಾರ ಪುರಸಭೆಗಳಿಗೆ ಇರುವ ನಿಯಮಾವಳಿಗಳೇ ಪಾಲಿಕೆಗಳಿಗೂ ಅನ್ವಯವಾಗಲಿದೆ. ಪ್ರತ್ಯೇಕ ಕಾಯ್ದೆ ರೂಪಿಸಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ’ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.
ಹೊಸ ಕಾಯ್ದೆಯಲ್ಲಿ ಜಾಹೀರಾತು ಶುಲ್ಕಕ್ಕೆ ಅವಕಾಶವಿದೆ. ಅರ್ಜಿದಾರರ ಪ್ರಕಾರ, ಈ ನಿಬಂಧನೆಯು ಕೆಎಂಸಿ ಕಾಯ್ದೆಗೆ ವಿರುದ್ಧವಾಗಿದೆ. ‘ಕರ್ನಾಟಕ ನಗರ ಯೋಜನೆ ಕಾಯ್ದೆಗೆ ವಿರುದ್ಧವಾಗಿ ಕಾನೂನು ಬಾಹಿರವಾಗಿ ಕಟ್ಟಿದ ಕಟ್ಟಡಗಳನ್ನು ಕ್ರಮಬದ್ಧಗೊಳಿಸಲು ಹೊಸ ಕಾಯ್ದೆಯಲ್ಲಿ ಅವಕಾಶ ನೀಡಲಾಗಿದೆ’ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.