ಬೆಂಗಳೂರು: ರಾಜ್ಯದಲ್ಲಿ ಪ್ರಾಯೋಗಿಕವಾಗಿ ನೀಡಲಾಗುತ್ತಿರುವ ಪ್ಲಾಸ್ಮಾ ಚಿಕಿತ್ಸೆಗೆ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶನಿವಾರ ಚಾಲನೆ ದೊರೆಯಿತು.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಈ ಕ್ಷಣಕ್ಕೆ ಸಾಕ್ಷಿಯಾದರು.ರಾಜ್ಯದಲ್ಲಿ ಈವರೆಗೆ ಕೋವಿಡ್ನಿಂದ 18 ಮಂದಿ ಮೃತಪಟ್ಟಿದ್ದಾರೆ. ಏಳು ಕೋವಿಡ್ ರೋಗಿಗಳು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ.ಹಾಗಾಗಿ ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರ ಪ್ಲಾಸ್ಮಾ ಚಿಕಿತ್ಸೆಗೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು.
ಈಗಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮತಿ ಪಡೆದು, ಬೆಂಗಳೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ (ಬಿಎಂಸಿಆರ್ಐ) ಮತ್ತು ಎಚ್ಸಿಜಿ ಕ್ಯಾನ್ಸರ್ ಆಸ್ಪತ್ರೆ ಸಹಯೋಗದಲ್ಲಿ ರಾಜ್ಯದಲ್ಲಿ ಚಿಕಿತ್ಸೆಗೆ ಸಿದ್ಧತೆ
ಮಾಡಿಕೊಳ್ಳಲಾಗಿದೆ.
ರೋಗಿಯೊಬ್ಬರಿಗೆ ಪ್ಲಾಸ್ಮಾ ಚಿಕಿತ್ಸೆಯನ್ನುಕ್ಯಾನ್ಸರ್ ತಜ್ಞ ಡಾ.ಯು.ಎಸ್. ವಿಶಾಲ್ ರಾವ್ ನೇತೃತ್ವದ ವೈದ್ಯರ ತಂಡಸೋಮವಾರ ಪ್ರಾರಂಭಿಸಲಿದೆ. ಸಾವಿನ ಪ್ರಮಾಣವನ್ನು ತಡೆಯುವ ನಿಟ್ಟಿನಲ್ಲಿ ಪ್ಲಾಸ್ಮಾ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ನಡೆಸಲಾಗುತ್ತಿದ್ದು, ಫಲಿತಾಂಶ ಸಕಾರಾತ್ಮಕವಾಗಿ ಬಂದಲ್ಲಿ ಮಾತ್ರ ಚಿಕಿತ್ಸೆ ಮುಂದುವರಿಸಲು ಅನುಮತಿ ದೊರೆಯುತ್ತದೆ.ಕೊರೊನಾ ಸೋಂಕಿತರಲ್ಲಿ ಈವರೆಗೆ 158 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಹಾಗಾಗಿ ಅವರಿಂದ ಪ್ಲಾಸ್ಮಾ ಪಡೆದು, ತೀವ್ರ ನಿಗಾ ಘಟಕದಲ್ಲಿರುವ ರೋಗಿಗಳಿಗೆ ನೀಡಲು ವೈದ್ಯರು ನಿರ್ಧರಿಸಿದ್ದಾರೆ.
ಕನಿಷ್ಠ ಇಬ್ಬರಿಗೆ ನೆರವು: ‘ರಾಜ್ಯದಲ್ಲಿ ಪ್ಲಾಸ್ಮಾ ಚಿಕಿತ್ಸೆಯನ್ನು ಪ್ರಾರಂಭಿಸಿರುವುದು ಐತಿಹಾಸಿಕ ಕ್ಷಣವಾಗಿದೆ.ವೆಂಟಿಲೇಟರ್ನಲ್ಲಿರುವ ಕೋವಿಡ್ ಪೀಡಿತರಿಗೆ ಈ ಚಿಕಿತ್ಸೆ ನೀಡಲಾಗುತ್ತದೆ. ಸೋಂಕಿನಿಂದ ಗುಣಮುಖರಾಗಿರುವ ಇಬ್ಬರು ಚಿಕಿತ್ಸೆಗೆ ಸಹಕರಿಸಲು ಮುಂದೆ ಬಂದಿದ್ದಾರೆ. ಇದೇ ರೀತಿ ಗುಣಮುಖರಾದ ಇತರರು, ಸಹಕಾರ ನೀಡಬೇಕು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.