ADVERTISEMENT

ಬೆಂಗಳೂರು | `ಬೇಸ್’ ಕ್ಯಾಂಪಸ್' ಉದ್ಘಾಟನೆ 20ರಂದು: ಪ್ರಧಾನಿ ಬಾಗಿ

​ಪ್ರಜಾವಾಣಿ ವಾರ್ತೆ
Published 13 ಜೂನ್ 2022, 20:15 IST
Last Updated 13 ಜೂನ್ 2022, 20:15 IST
ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯ’ದ (ಬೇಸ್) ನೂತನ ಕ್ಯಾಂಪಸ್ಸಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಸೋಮವಾರ ಭೇಟಿ ಪರಿಶೀಲಿಸಿದರು
ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯ’ದ (ಬೇಸ್) ನೂತನ ಕ್ಯಾಂಪಸ್ಸಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಸೋಮವಾರ ಭೇಟಿ ಪರಿಶೀಲಿಸಿದರು   

ಬೆಂಗಳೂರು: ನಾಗರಬಾವಿ ಸಮೀಪದ ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯ’ದ (ಬೇಸ್) ನೂತನ ಕ್ಯಾಂಪಸ್ಸನ್ನು ಇದೇ 20ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆ ಪರಿಶೀಲಿಸಿದರು.

ಜತೆಗೆ, ಟಾಟಾ ಸಮೂಹ ಸಂಸ್ಥೆಯ ಸಹಾಯದೊಂದಿಗೆ ₹ 4.50 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಉನ್ನತೀಕರಿಸಿರುವ 150 ಸರ್ಕಾರಿ ಐಟಿಐ ಸಂಸ್ಥೆಗಳನ್ನು ಕೂಡ ಈ ಕ್ಯಾಂಪಸ್ಸಿನಿಂದಲೇ ಪ್ರಧಾನಿ ಲೋಕಾರ್ಪಣೆ ಮಾಡಲಿದ್ದಾರೆ. ಈ ಉದ್ದೇಶದಿಂದ ಇಲ್ಲಿ ಐಟಿಐ ಸಂಸ್ಥೆಯ ಮಾದರಿ ಪ್ರತಿಕೃತಿ ಮತ್ತು ಅತ್ಯಾಧುನಿಕ ಪ್ರಯೋಗಾಲಯದ ಮಾದರಿಗಳನ್ನು ಸೃಷ್ಟಿಸಲಾಗಿದೆ.

ಸಂಸ್ಥೆಯ ಮುಖ್ಯಸ್ಥರು ಮತ್ತಿತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಯಾವ್ಯಾವ ವಿಭಾಗದವರು, ಯಾವ್ಯಾವ ಕೆಲಸಗಳನ್ನು ಮಾಡಬೇಕು ಎಂದು ಸೂಚಿಸಿ, ಸೂಕ್ತ ಸೂಚನೆಗಳನ್ನು ನೀಡಿದರು.

ADVERTISEMENT

‘₹ 250 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಬೇಸ್ ಕ್ಯಾಂಪಸ್, ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಅಳವಡಿಕೆ ದೃಷ್ಟಿಯಿಂದಲೂ ಗಮನ ಸೆಳೆಯುತ್ತಿದೆ. ಮೋದಿಯವರ ಭೇಟಿಯ ಸಂದರ್ಭದಲ್ಲಿ ಇದನ್ನು ಕೂಡ ಬಿಂಬಿಸಲು ಯೋಜಿಸಬೇಕು.ಪ್ರಧಾನಿಬರುತ್ತಿರುವುದರಿಂದ ಎಲ್ಲ ವ್ಯವಸ್ಥೆ ಸಮರ್ಪಕವಾಗಿರಬೇಕು. ಇದರಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ಕೊಡಬಾರದು’ ಎಂದರು.

ಐಟಿಐಗಳ ಲೋಕಾರ್ಪಣೆಗೆ ಮಾಡಿಕೊಂಡಿರುವ ವ್ಯವಸ್ಥೆಗಳನ್ನು ವೀಕ್ಷಿಸಿದ ಸಚಿವರು, ಪ್ರಯೋಗಾಲಯಗಳಲ್ಲಿ ಇರುವ ಆಧುನಿಕ ಸಾಧನಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಕೌಶಲಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ. ಪ್ರದೀಪ್, ಬಿಬಿಎಂಪಿ ಪಶ್ಚಿಮ ವಲಯದ ಆಯುಕ್ತ ಡಾ.ದೀಪಕ್, ಬೇಸ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಭಾನುಮೂರ್ತಿ, ಕುಲಸಚಿವೆ ಶೋಭಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.