
ಬೆಂಗಳೂರು: ರಾಜ್ಯದಲ್ಲಿ ‘ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ’ ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ‘ಸಿಟಿ ಆಕ್ಸಿಲರೇಟರ್’ ಕಾರ್ಯಕ್ರಮಕ್ಕೆ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಶುಕ್ರವಾರ ಚಾಲನೆ ನೀಡಿದರು.
ಈ ಯೋಜನೆಯಡಿ ಚಾವಣಿ ಸೌರ (ಆರ್ಟಿಎಸ್) ಘಟಕಗಳ ಅಳವಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ(ಎಂಎನ್ಆರ್ಇ), ಶಕ್ತಿ ಸುಸ್ಥಿರ ಇಂಧನ ಫೌಂಡೇಷನ್, ಕೆಪಿಎಂಜಿ ಮತ್ತು ಬೆಸ್ಕಾಂ ಸಹಯೋಗದೊಂದಿಗೆ ಸಿಟಿ ಆಕ್ಸಿಲರೇಟರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
‘ಸಿಟಿ ಆಕ್ಸಿಲರೇಟರ್’ ಉಪಕ್ರಮದಡಿ ಮೊದಲ ಹಂತದಲ್ಲಿ ಬೆಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ ಸೌರ ಚಾವಣಿ ಘಟಕಗಳ ಸ್ಥಾಪನೆಗೆ ಉತ್ತೇಜನೆ ನೀಡಲಾಗುತ್ತದೆ. ವಿದ್ಯುತ್ ವಿತರಣಾ ಕಂಪನಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ತಾಂತ್ರಿಕ ನೆರವು ಒದಗಿಸಲಾಗುತ್ತದೆ. ಈ ಉಪಕ್ರಮವನ್ನು ದೇಶದಾದ್ಯಂತ 100 ನಗರಗಳಲ್ಲಿ ಹಂತ ಹಂತವಾಗಿ ಜಾರಿಗೆ ತರಲಾಗುತ್ತಿದೆ.
ಗೌರವ್ ಗುಪ್ತ ಮಾತನಾಡಿ, ‘ರಾಜ್ಯದಾದ್ಯಂತ ಮನೆಗಳಲ್ಲಿ ಸೌರಶಕ್ತಿಯ ಬಳಕೆಯನ್ನು ಉತ್ತೇಜಿಸುವ ಗುರಿಯನ್ನು ಈ ಯೋಜನೆ ಹೊಂದಿದೆ. ಇದರಿಂದ ಕರ್ನಾಟಕ ನವೀಕರಿಸಬಹುದಾದ ಇಂಧನ ನೀತಿಯ ಗುರಿ ತಲುಪಲು ಸುಲಭವಾಗಲಿದೆ’ ಎಂದು ಅಭಿಪ್ರಾಯಪಟ್ಟರು.
ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಎನ್. ಶಿವಶಂಕರ್ ಮಾತನಾಡಿ, ‘ಸುಸ್ಥಿರ ವಿದ್ಯುತ್ ಉತ್ಪಾದನೆ ಹಾಗೂ ಬಳಕೆಗೆ ರೂಪಿಸಿರುವ ಪಿಎಂ ಸೂರ್ಯಘರ್ ಯೋಜನೆಯನ್ನು ಅಳವಡಿಸಿಕೊಳ್ಳುವುದರಿಂದ ಸಾಂಪ್ರದಾಯಿಕ ಇಂಧನ ಮೂಲಗಳ ಮೇಲಿನ ಅವಲಂಬನೆ ಕಡಿಮೆಯಾಗಲಿದೆ. ಪರಿಸರ ಸ್ನೇಹಿಯೂ ಆದ ಸೌರ ವಿದ್ಯುತ್ತಿನ ಬಳಕೆಯಿಂದ ಹಣದ ಉಳಿತಾಯವೂ ಸಾಧ್ಯವಾಗಲಿದೆ’ ಎಂದು ಹೇಳಿದರು.
ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಆರ್. ಜಯಕುಮಾರ್ ಉಪಸ್ಥಿತರಿದ್ದರು.
ಸೋಲಾರ್ ಫಲಕ ಅಳವಡಿಕೆ
ದೇಶದಲ್ಲಿ ಒಂದು ಕೋಟಿ ಮನೆಗಳ ಚಾವಣಿಗೆ ಸೋಲಾರ್ ಫಲಕ ಅಳವಡಿಸುವ ಮೂಲಕ ಸೂರ್ಯ ಘರ್ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಕೇಂದ್ರ ಸರಕಾರದ pmsuryaghar.gov.in ವೆಬ್ಸೈಟ್ ಮೂಲಕ ಗೃಹ ಬಳಕೆದಾರರು ಅರ್ಜಿ ಸಲ್ಲಿಸಬಹುದು. ಮನೆಯ ಚಾವಣಿ ಸೋಲಾರ್ ವ್ಯವಸ್ಥೆಯನ್ನು ಗ್ರಿಡ್ ಜತೆಗೆ ಸಂಪರ್ಕಿಸುವುದರಿಂದ 25 ವರ್ಷ ವಿದ್ಯುತ್ ಬಿಲ್ ಪಾವತಿಸಬೇಕಿಲ್ಲ. ಚಾವಣೆಯಲ್ಲಿ ಅಳವಡಿಸುವುದರಿಂದ ಹೆಚ್ಚುವರಿ ಜಾಗದ ಅಗತ್ಯ ಇಲ್ಲ. ನಿರ್ವಹಣೆ ವೆಚ್ಚ ಕಡಿಮೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 1 ಕಿಲೋ ವ್ಯಾಟ್ ಸಾಮರ್ಥ್ಯದ ವ್ಯವಸ್ಥೆಗೆ ₹ 30000 ಸಬ್ಸಿಡಿ 2 ಕಿಲೋ ವ್ಯಾಟ್ ಸಾಮರ್ಥ್ಯದ ವ್ಯವಸ್ಥೆಗೆ ₹ 6000 3 ಕಿಲೋ ವ್ಯಾಟ್ ಮೇಲ್ಪಟ್ಟ ವ್ಯವಸ್ಥೆಗೆ ಗರಿಷ್ಠ ಸಬ್ಸಿಡಿ ಮಿತಿ ₹ 78000 ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.